ಪುನೀತ್ ಕೆರೆಹಳ್ಳಿ ಸೇರಿ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಮೈಸೂರು: ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಿಂದುತ್ವ ಸಂಘಟನೆಗಳ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ನಡೆಯುತ್ತಿರುವ ಕಸಾಯಿಖಾನೆಗಳ ವಿರುದ್ಧ ಜಿಲ್ಲಾಡಳಿತ ಮತ್ತು ನಗರ ಪೊಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪುನೀತ್ ಕೆರೆಹಳ್ಳಿ ಒತ್ತಾಯಿಸಿದರು.
ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಬಂದಿದ್ದೇವೆ.
ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತರು ಸ್ಥಳಕ್ಕೆ ಆಗಮಿಸಿ ತಮ್ಮ ಮನವಿ ಸ್ವೀಕರಿಸಿ, ಕಸಾಯಿಖಾನೆಗಳ ವಿರುದ್ಧ ಕೈಗೊಳ್ಳುವ ಕ್ರಮದ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ಗೋಹತ್ಯೆ ಕುರಿತು ವ್ಯಕ್ತಿಯೊಬ್ಬರು ಕರೆ ಮಾಡಿ ಸವಾಲು ಹಾಕಿದ್ದಾರೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಮನವಿ ಸ್ವೀಕರಿಸಿ ಸೂಕ್ತ ಸ್ಪಷ್ಟನೆ ನೀಡದಿದ್ದರೆ ಮೈಸೂರಿನಿಂದ ತೆರಳುವುದಿಲ್ಲ ಎಂದು ಪುನೀತ್ ಕೆರೆಹಳ್ಳಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕಾರ್ಯಕರ್ತರು ಗುಂಪಾಗಿ ನಿಂತು ಘೋಷಣೆಗಳನ್ನು ಕೂಗಿದರು. ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಕಾರ್ಯಕರ್ತರು ಅವರನ್ನು ಸುತ್ತುವರಿದು ತಡೆಯಲು ಪ್ರಯತ್ನಿಸಿದರು. ಕೆಲವರು ಸ್ಥಳದಲ್ಲೇ ಕುಳಿತು ಹಾಗೂ ಮಲಗಿ ಪ್ರತಿಭಟನೆ ಮುಂದುವರಿಸಿದರು.ವಂದೇ ಮಾತರಂ ಸೇರಿದಂತೆ ವಿವಿಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಪೊಲೀಸರ ಕ್ರಮದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಒಬ್ಬೊಬ್ಬರನ್ನಾಗಿ ವಶಕ್ಕೆ ಪಡೆಯಲು ಮುಂದಾದಾಗ ಸ್ಥಳದಲ್ಲಿ ಕೆಲಕಾಲ ನೂಕಾಟ, ತಳ್ಳಾಟದ ವಾತಾವರಣ ನಿರ್ಮಾಣವಾಯಿತು.
ಶಾಂತಿಯುತವಾಗಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲು ಬಂದಿದ್ದರೂ ಯಾವುದೇ ಮಾತುಕತೆ ನಡೆಸದೆ ತಮ್ಮನ್ನು ವಶಕ್ಕೆ ಪಡೆಯಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದರು. ಮುಂದಿನ ದಿನಗಳಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಮೈಸೂರಿಗೆ ಆಗಮಿಸುವುದಾಗಿ ಅವರು ಎಚ್ಚರಿಕೆ ನೀಡಿದರು.ಇದೇ ವೇಳೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮೈಸೂರಿಗೆ ಆಗಮಿಸುತ್ತಿದ್ದ ಕೆಲವು ಹಿಂದುತ್ವ ಸಂಘಟನೆಗಳ ಕಾರ್ಯಕರ್ತರನ್ನು ನಗರ ಪ್ರವೇಶಿಸುವ ಮಾರ್ಗಗಳಲ್ಲೇ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.








