ಚಿತ್ರದುರ್ಗ. ಆ.25: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಶೀತ, ಕೆಮ್ಮು ಹಾಗೂ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜಿಲ್ಲೆಯಲ್ಲೂ ಸಾಮಾನ್ಯ ಶೀತ, ಕೆಮ್ಮು ಮತ್ತು ಜ್ವರ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.
ಈ ರೋಗಲಕ್ಷಣಗಳು ಉಸಿರಾಟ, ಸೋಂಕಿತ ವ್ಯಕ್ತಿ ಉಪಯೋಗಿಸಿದ ವಸ್ತುಗಳು ಹಾಗೂ ಗಾಳಿಯಲ್ಲಿನ ಕಣಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಈದ್ ಮಿಲಾದ್, ಗೌರಿ ಗಣೇಶ ಚತುರ್ಥಿ, ಓಣಂ, ದಸರಾ ಹಾಗೂ ದೀಪಾವಳಿ ಮುಂತಾದ ಹಬ್ಬಗಳು ಬರಲಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಸಾಮೂಹಿಕವಾಗಿ ಸೇರುವುದರಿಂದ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿಗೆ ಪ್ರಕರಣಗಳು ಕಂಡುಬರುವ ಅಪಾಯವಿದೆ.
ಈ ಸಾಂಕ್ರಾಮಿಕ ರೋಗ ಹತೋಟಿಗಾಗಿ ಸಾರ್ವಜನಿಕರು ರೋಗಲಕ್ಷಣಗಳು ಕಂಡುಬಂದಲ್ಲಿ ಕೆಮ್ಮುವಾಗ ಅಥವಾ ಸೀನುವಾಗ ಕಡ್ಡಾಯವಾಗಿ ಮಾಸ್ಕ್ ಅಥವಾ ಕರವಸ್ತ್ರ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸಬೇಕು ಹಾಗೂ ರೋಗಲಕ್ಷಣಗಳಿಗೆ ಅನುಸಾರವಾಗಿ ಪರೀಕ್ಷೆಗೆ ಒಳಗಾಗಬೇಕು.
ಸರ್ಕಾರಿ ಕಚೇರಿ, ವಸತಿ ಸಮುಚ್ಚಯ, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್, ಬಸ್ ಹಾಗೂ ರೈಲ್ವೆ ನಿಲ್ದಾಣ, ವಿದ್ಯಾ ಸಂಸ್ಥೆಗಳು ಮತ್ತು ಮಾರುಕಟ್ಟೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸೋಂಕಿತ ವ್ಯಕ್ತಿಗಳು ಅಂತರ ಕಾಯ್ದುಕೊಳ್ಳಬೇಕು ಹಾಗೂ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು.
ರೋಗಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ರೋಗಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಪ್ರತಿಯೊಬ್ಬರೂ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಕೋರಿದ್ದಾರೆ.










