ಚಿತ್ರದುರ್ಗ.ಆ.29: ಜಿಲ್ಲೆಯಲ್ಲಿ ಅರ್ಹ ವಿದ್ಯಾಭ್ಯಾಸವಿಲ್ಲದೆ ಅಕ್ರಮವಾಗಿ ವೈದ್ಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರನ್ನು ಪತ್ತೆಹಚ್ಚಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ‘ವಿಶೇಷ ಪಡೆ’ ರಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮೊಳಕಾಲ್ಮೂರು ತಾಲೂಕಿನ ಉಡೇವು ಗ್ರಾಮದ ರಾಜು ಬಿನ್ ಇಯ್ಯಪ್ಪ ಎಂಬ ವ್ಯಕ್ತಿಯು ಶೀತ ಜ್ವರದಿಂದ ಬಳಲುತ್ತಿದ್ದು, ಕೋಣಸಾಗರ ಗ್ರಾಮದ ಜ್ಯೋತಿ ಎಂಬ ನಕಲಿ ವೈದ್ಯೆನ ಬಳಿ ಚಿಕಿತ್ಸೆ ಪಡೆದಿದ್ದರು. ತದನಂತರ ರೋಗ ಉಲ್ಬಣಗೊಂಡು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಕುರಿತು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವರದಿ ಸುದ್ದಿ ಬಿತ್ತರವಾಗಿತ್ತು. ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಡಾ.ಎಂ.ಸಿ.ಸುನೀಲ್ ಕುಮಾರ್ ಮಾಧ್ಯಮಗಳ ವರದಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಘಟನೆ ಸಂಬಂಧ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಮೊಳಕಾಲ್ಮೂರು ತಾಲೂಕು ವೈದ್ಯಾಧಿಕಾರಿಗಳು ಹಾಗೂ ಪ್ರಾಧಿಕೃತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಕಲಿ ವೈದ್ಯೆಯ ಮನೆಗೆ ಬೀಗ ಹಾಕಿರುವುದು ಕಂಡುಬಂದಿದ್ದು, ಮನೆಯ ಬಾಗಿಲಿಗೆ ನೋಟೀಸ್ ಅಂಟಿಸಲಾಗಿದೆ. ಶೀಘ್ರವೇ ಮತ್ತೊಮ್ಮೆ ಕೆ.ಪಿ.ಎಂ.ಇ. ನೋಡಲ್ ಅಧಿಕಾರಿಗಳು ಹಾಗೂ ಮೊಳಕಾಲ್ಮೂರು ತಾಲೂಕು ವೈದ್ಯಾಧಿಕಾರಿಗಳ ತಂಡದ ಜೊತೆ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಕೂಲಂಕುಷ ವಿಚಾರಣೆ ಮಾಡಲಾಗುವುದು. ಜಿಲ್ಲಾ ಕೆ.ಪಿ.ಎಂ.ಇ. ಕಾಯ್ದೆ 2007, ನಿಯಮ 2009 ಮತ್ತು ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಸೂಕ್ತ ಪರಿಶೀಲನೆ ನಡೆಸಿ, ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾ ಸಕ್ಷಮ ಪ್ರಾಧಿಕಾರಕ್ಕೆ ಸುದೀರ್ಘ ವರದಿ ನೀಡುವುದಾಗಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳು ಡಾ.ಎಂ.ಸಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.














