ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 02 : ಕಾಳ ಸಂತೆಯಲ್ಲಿ ಅಕ್ಕಿ ದಂಧೆ ನಡೆಸುತ್ತಿರುವವರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಯುವ ಕರ್ನಾಟಕ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಅಕ್ಕಿ ಸುರಿದು ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಮಾಡುತ್ತಿರುವವರ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಬಡವರು ಯಾರು ಹೊಟ್ಟೆ ಹಸಿವಿನಿಂದ ನರಳಬಾರದೆಂದು ರಾಜ್ಯ ಸರ್ಕಾರ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ನೀಡುತ್ತಿರುವ ಅಕ್ಕಿಗಳನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡಿ ಹಣ ಗಳಿಸುವ ದಂಧೆಯಲ್ಲಿ ತೊಡಗಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅನೇಕ ಬಾರಿ ಜಿಲ್ಲಾಧಿಕಾರಿ, ಆಹಾರ ಇಲಾಖೆ ಉಪ ನಿರ್ದೇಶಕರು, ತಹಶೀಲ್ದಾರ್ ಇವರುಗಳಿಗೆ ದೂರು ನೀಡಿದ್ದರೂ ನಿರ್ಲಕ್ಷೆ ವಹಿಸುತ್ತಿರುವುದನ್ನು ಗಮನಿಸಿದರೆ ದಂಧೆಕೋರರ ಜೊತೆ ಅಧಿಕಾರಿಗಳು ಶ್ಯಾಮೀಲಾಗಿದ್ದಾರೇನೋ ಎನ್ನುವ ಅನುಮಾನ ಕಾಡುತ್ತಿದೆ. ತೂಕದಲ್ಲಿಯೂ ಸಾಕಷ್ಟು ಮೋಸ ನಡೆಯುತ್ತಿದ್ದು, ಪಡಿತರ ಚೀಟಿದಾರರಿಗೆ ಇದರಿಂದ ವಂಚನೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪಡಿತರ ಚೀಟಿದಾರರದಿಂದ ಕಡಿಮೆ ಬೆಲೆಗೆ ಅಕ್ಕಿಗಳನ್ನು ಖರೀಧಿಸುವ ಕಾಳ ಸಂತೆಕೋರರು ಹೆಚ್ಚಿನ ಬೆಲೆಗೆ ಹೋಟೆಲ್ ಹಾಗೂ ಮಿಲ್ಗಳಿಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ ಪ್ರತಿ ಕಾರ್ಡುದಾರರಿಂದ ಇಪ್ಪತ್ತು ರೂ.ಗಳನ್ನು ಅಕ್ರಮವಾಗಿ ವಸೂಲಿ ಮಾಡಲಾಗುತ್ತಿದೆ. ಅಧಿಕಾರಿಗಳು ನ್ಯಾಯಬೆಲೆ ಅಂಗಡಿಗಳಿಗೆ ದೀಢೀರ್ ಭೇಟಿ ನೀಡಿ ಪರಿಶೀಲಿಸಿದರೆ ಅಲ್ಲಿ ನಡೆಯುವ ಅಕ್ರಮ ಬಯಲಾಗುತ್ತದೆ. ವಿಶೇಷ ತಪಾಸಣಾ ತಂಡ ರಚಿಸಿ ಕಾಳ ಸಂತೆಯಲ್ಲಿ ಅಕ್ಕಿ ಸಾಗಾಟವಾಗುವುದನ್ನು ತಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಬೇಕಾಗುತ್ತದೆಂದು ಯುವ ಕರ್ನಾಟಕ ವೇದಿಕೆ ಜಿಲ್ಲಾಧ್ಯಕ್ಷ ರವಿಕುಮಾರ್ನಾಯ್ಕ ಎಚ್ಚರಿಸಿದರು.











