ಬೆಂಗಳೂರು: ಕರ್ನಾಟಕದ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪಾರಂಪರಿಕ ವೈಭವವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ.
ಕರ್ನಾಟಕದಲ್ಲಿರುವ 1 ಲಕ್ಷಕ್ಕೂ ಅಧಿಕ ಐತಿಹಾಸಿಕ ತಾಣಗಳ ಸಂರಕ್ಷಣೆಗೆ ‘ಕರ್ನಾಟಕ ಹೆರಿಟೇಜ್ ಅಂಡ್ ಕಲ್ಚರಲ್ ಫೌಂಡೇಶನ್’ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ರಾಜ್ಯದ ಪಾರಂಪರಿಕ ಸ್ಮಾರಕಗಳು, ದೇವಾಲಯಗಳು, ಐತಿಹಾಸಿಕ ಕಟ್ಟಡಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ತಾಣಗಳ ಸಂರಕ್ಷಣೆಗೆ ಒತ್ತು ನೀಡಲಾಗುವುದು.

CSR ಸಂಸ್ಥೆಗಳು ಹಾಗೂ ಅನಿವಾಸಿ ಭಾರತೀಯರ (NRI) ಸಹಭಾಗಿತ್ವ ಪಡೆದುಕೊಂಡು ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ವಿಶ್ವಮಟ್ಟದಲ್ಲಿ ಪರಿಚಯಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
ಕನ್ನಡನಾಡಿನ ಭವ್ಯ ಪರಂಪರೆಗೆ ಹೊಸ ಜೀವ
ಕರ್ನಾಟಕದ 1 ಲಕ್ಷಕ್ಕೂ ಅಧಿಕ ಐತಿಹಾಸಿಕ ತಾಣಗಳನ್ನು ಸಂರಕ್ಷಿಸಲು 'ಕರ್ನಾಟಕ ಹೆರಿಟೇಜ್ ಅಂಡ್ ಕಲ್ಚರಲ್ ಫೌಂಡೇಶನ್' ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. CSR ಮತ್ತು ಎನ್ಆರ್ಐ ಸಹಭಾಗಿತ್ವದೊಂದಿಗೆ ಸಾಂಸ್ಕೃತಿಕ ವೈಭವವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವುದೇ ಸರ್ಕಾರದ ಮುಖ್ಯ ಗುರಿಯಾಗಿದೆ. ಜಾಗತಿಕ… pic.twitter.com/nG4ak4kDjh
— DIPR Karnataka (@KarnatakaVarthe) September 3, 2026
ಇದನ್ನು ಓದಿಚಿತ್ರದುರ್ಗ | ಲಕ್ಷ್ಮೀದೇವಿ ನಿಧನ
ಜಾಗತಿಕ ಕನ್ನಡಿಗರ ನೆರವಿನೊಂದಿಗೆ ನಾಡು, ನುಡಿ, ಕಲೆ, ಸಂಸ್ಕೃತಿ ಹಾಗೂ ಐತಿಹಾಸಿಕ ಪರಂಪರೆಯನ್ನು ಜಗತ್ತಿಗೆ ಸಾರುವ ಬೃಹತ್ ಯೋಜನೆ ರೂಪಿಸಲಾಗುತ್ತಿದೆ. ಈ ಸಂಬಂಧದ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಸಚಿವ ಸಂಪುಟದ ಮುಂದೆ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ. 239 ತಾಲೂಕುಗಳಲ್ಲಿ ಈಗಾಗಲೇ 1 ಲಕ್ಷಕ್ಕೂ ಅಧಿಕ ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ತಾಣಗಳಿರುವುದನ್ನು ಗಮನದಲ್ಲಿಟ್ಟುಕೊಂಡು ಅವುಗಳ ಸಮಗ್ರ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ರಾಜ್ಯದ ಪರಂಪರೆಯನ್ನು ಕೇವಲ ಸಂರಕ್ಷಿಸುವುದಷ್ಟೇ ಅಲ್ಲದೆ, ಪ್ರವಾಸೋದ್ಯಮದ ಮೂಲಕ ವಿಶ್ವದ ಗಮನ ಸೆಳೆಯುವ ಹಾಗೂ ಕರ್ನಾಟಕದ ಸಾಂಸ್ಕೃತಿಕ ಹೆಗ್ಗಳಿಕೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.












