ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಬ್ಯಾರಕ್ ಬದಲಾವಣೆಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಗೆ 59ನೇ ಸೆಷನ್ಸ್ ಕೋರ್ಟ್ ಸ್ಪಂದಿಸಿದೆ. ಆರೋಗ್ಯದ ಸಮಸ್ಯೆ ಎದುರಾದರೆ ಅಗತ್ಯಾನುಸಾರ ಬೇರೆ ಬ್ಯಾರಕ್ಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಜೈಲು ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.
ಸಾಮಾನ್ಯ ಮಹಿಳಾ ಕೈದಿಗಳಿರುವ ಬ್ಯಾರಕ್ನಲ್ಲಿ ಇರಲು ತೊಂದರೆಯಾಗುತ್ತಿದೆ ಎಂದು ಪವಿತ್ರಾ ಗೌಡ ಪರ ವಕೀಲರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಬ್ಯಾರಕ್ನಲ್ಲಿ ಅದರ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಕೈದಿಗಳನ್ನು ಇರಿಸಲಾಗಿದೆ ಎಂಬುದನ್ನೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.ಸುಮಾರು 20 ಕೈದಿಗಳಿಗೆ ಅವಕಾಶವಿರುವ ಬ್ಯಾರಕ್ನಲ್ಲಿ 30 ಮಂದಿಯನ್ನು ಇರಿಸಲಾಗಿದೆ. ಇದರಿಂದಾಗಿ ಸೂಕ್ತ ವಿಶ್ರಾಂತಿ ಹಾಗೂ ನಿದ್ದೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಪವಿತ್ರಾ ಗೌಡ ಪರ ವಕೀಲರು ಮನವಿ ಮಾಡಿದ್ದರು.

ನಿರಂತರ ನಿದ್ದೆಯ ಕೊರತೆಯಿಂದ ತಲೆನೋವು ಸೇರಿದಂತೆ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿವೆ. ಅಲ್ಲದೆ, ಬ್ಯಾರಕ್ನಲ್ಲಿನ ಪರಿಸ್ಥಿತಿಯಿಂದ ಮಾನಸಿಕ ಒತ್ತಡ ಹಾಗೂ ಉದ್ವೇಗ ಉಂಟಾಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು.ಈ ಅರ್ಜಿಯನ್ನು ಪರಿಗಣಿಸಿದ 59ನೇ ಸೆಷನ್ಸ್ ಕೋರ್ಟ್, ಜೈಲು ಮ್ಯಾನ್ಯುಯಲ್ ನಿಯಮಗಳನ್ನು ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಅಗತ್ಯವಿದ್ದ ಸಂದರ್ಭದಲ್ಲಿ, ವಿಶೇಷವಾಗಿ ಆರೋಗ್ಯದ ಸಮಸ್ಯೆ ಎದುರಾದರೆ ಪವಿತ್ರಾ ಗೌಡ ಅವರನ್ನು ಬೇರೆ ಬ್ಯಾರಕ್ಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ.ಈ ಮೂಲಕ ಬ್ಯಾರಕ್ ಬದಲಾವಣೆಗೆ ಸಂಬಂಧಿಸಿದಂತೆ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಕೊಂಚ ಪರಿಹಾರ ದೊರೆತಂತಾಗಿದೆ.










