ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 09 : ನಮ್ಮ ಸಮುದಾಯದ ಚಿತ್ತ ಯಾವಾಗಲೂ ಜನಾರೋಗ್ಯ ಹಾಗೂ ಶಿಕ್ಷಣದ ಕಡೆಗಿದೆ. ಈ ಪರಿಕಲ್ಪನೆಯಡಿಯೇ ನಿರಂತರವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಆರ್ಯವೈಶ್ಯ ಸಂಘದ ಉಪಾಧ್ಯಕ್ಷರಾದ ಪಿ.ಎಲ್. ಸುರೇಶರಾಜು ತಿಳಿಸಿದರು.
ನಗರದ ವಾಸವಿ ಮಹಲ್ನಲ್ಲಿ ಆರ್ಯವೈಶ್ಯ ಸಂಘ, ಅ.ವೋ.ಪ ಸಂಸ್ಥೆ ಹಾಗೂ ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೆಲ್ತ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ನಾರಾಯಣ ಹೆಲ್ತ್ನ ಡಾ. ಹೇಮಂತ್ ಮಾತನಾಡಿ, ಕಾಯಿಲೆಗಳು ಉಲ್ಬಣಗೊಳ್ಳುವ ಮುನ್ನವೇ ಜನರು ಕಾಲಕಾಲಕ್ಕೆ ಕ್ರಮಬದ್ಧವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಸಾರ್ವಜನಿಕರ ಹಿತದೃಷ್ಟಿಯಿಂದ ನಮ್ಮ ಸಂಸ್ಥೆ ಜನರೊಂದಿಗೆ ನಿರಂತರ ಒಡನಾಟ ಇಟ್ಟುಕೊಂಡು ಇಂತಹ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದರು.
ಅವೋಪ ಸಂಸ್ಥೆಯ ಅಧ್ಯಕ್ಷರಾದ ಡಿ.ಆರ್. ತಿಪ್ಪೇಸ್ವಾಮಿ ಮಾತನಾಡಿ, “ಸಮುದಾಯದ ಕಾರ್ಯಕ್ರಮಗಳ ಜೊತೆಗೆ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವು ಜನಪರ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮೀಣ ಭಾಗಗಳಲ್ಲೂ ಆರೋಗ್ಯ ಶಿಬಿರಗಳನ್ನು ನಡೆಸಲಾಗಿದ್ದು, ಇಂದಿನ ಶಿಬಿರದಲ್ಲಿ 100ಕ್ಕೂ ಹೆಚ್ಚು ಜನ ಪಾಲ್ಗೊಂಡು ಪ್ರಯೋಜನ ಪಡೆದಿರುವುದು ಸಂತಸ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಆರ್ಯವೈಶ್ಯ ಸಂಘದ ಪ್ರಧಾನ ಕಾರ್ಯದರ್ಶಿ ಎಸ್. ನಾಗರಾಜ್, ಅವೋಪ ಕಾರ್ಯದರ್ಶಿ ಎನ್.ವಿ. ವೆಂಕಟೇಶ್ಮೂರ್ತಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಟಿ.ಎಸ್. ಸುಹಾಸ್ ಸ್ವಾಗತಿಸಿದರು. ನಂತರ ವೈದ್ಯರ ತಂಡಕ್ಕೆ ಗೌರವಾರ್ಪಣೆ ಸಲ್ಲಿಸಿ, ಎನ್.ವಿ. ವೆಂಕಟೇಶ್ಮೂರ್ತಿ ಅವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ವರದಿ ಮತ್ತು ಫೋಟೋ ಕೃಪೆ :
ಪ್ರೊ ಟಿ.ವಿ. ಸುರೇಶಗುಪ್ತ
ಮೊ : 9945461834











