ಬೆಂಗಳೂರು.ಸೆಪ್ಟೆಂಬರ್.11: ರಾಜ್ಯದಲ್ಲಿ ಆಯೋಜಿಸಲಾಗುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇನ್ಮುಂದೆ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ವಿವಿಧ ಸಮಾರಂಭಗಳಲ್ಲಿ ಗೀತೆಯ ಗಾಯನ ಮತ್ತು ವಾದನದಲ್ಲಿ ಏಕರೂಪತೆ, ಗೌರವ ಹಾಗೂ ಸೂಕ್ತ ಶಿಷ್ಟಾಚಾರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಚಿವ ಸಂಪುಟದ ತೀರ್ಮಾನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳನ್ನು ಪರಿಗಣಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ಈ ಅಧಿಕೃತ ನಡವಳಿಯನ್ನು ಪ್ರಕಟಿಸಿದೆ.
ಗೌರವಾನ್ವಿತ ರಾಷ್ಟ್ರಪತಿಗಳು, ಉಪರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಅಧಿಕೃತ ಕಾರ್ಯಕ್ರಮಗಳನ್ನು ಹೊರತುಪಡಿಸಿ, ಉಳಿದೆಲ್ಲಾ ರಾಜ್ಯ ಸರ್ಕಾರಿ ಕಾರ್ಯಕ್ರಮ ಹಾಗೂ ಸಮಾರಂಭಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.











