ವರದಿ ಮತ್ತು ಫೋಟೋ ಕೃಪೆ :
ಕೋಡಿಹಳ್ಳಿ ಟಿ.ಶಿವಮೂರ್ತಿ
ಚಳ್ಳಕೆರೆ, ಮೊ : 97427 56304
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 11 : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ನಲ್ಲಿಯಲ್ಲಿ ನೀರು ಹಿಡಿಯಲು ಹೋಗಿದ್ದ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ.
ಮೃತರನ್ನು ಕೋಡಿಹಳ್ಳಿ ಗ್ರಾಮದ ಶ್ರೀಮತಿ ಜಯಮ್ಮ (60) ಎಂದು ಗುರುತಿಸಲಾಗಿದೆ. ಎಂದಿನಂತೆ ಮನೆ ಮುಂಭಾಗದ ಸಾರ್ವಜನಿಕ ನಲ್ಲಿಯಲ್ಲಿ ನೀರು ಹಿಡಿಯಲು ತೆರಳಿದ್ದ ವೇಳೆ, ಅಲ್ಲಿನ ಬೋರ್ವೆಲ್ ಮೋಟಾರ್ ಪಂಪ್ ವೈರ್ ಶಾರ್ಟ್ ಸರ್ಕ್ಯೂಟ್ ಆಗಿ ಈ ದುರ್ಘಟನೆ ಸಂಭವಿಸಿದೆ.
ತಳಕು ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿಅನೇಕ ರೀತಿಯ ಸಾರ್ವಜನಿಕ ಸ್ಥಳಗಳಲ್ಲಿ ಸಾವುಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿದ್ಯುತ್ ಶಾಕ್, ಕೆರೆ-ಬಾವಿಗಳಲ್ಲಿ ಈಜಲು ಹೋಗಿ ಮುಳುಗುವುದು, ರಸ್ತೆ ಅಪಘಾತಗಳು ಹಾಗೂ ಮಾನಸಿಕ ಖಿನ್ನತೆಯಿಂದಾಗಿ ಹಲವು ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಬೇಸಿಗೆ ರಜೆಯ ಸಂದರ್ಭದಲ್ಲಿ ಗ್ರಾಮೀಣ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಇಂತಹ ದುರಂತಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದೆ.
ಗ್ರಾಮೀಣ ಭಾಗದಲ್ಲಿರುವ ಬೋರ್ವೆಲ್ಗಳು, ಕೊಳವೆಬಾವಿಗಳು ಮತ್ತು ಸಾರ್ವಜನಿಕ ನಲ್ಲಿಗಳ ವೈರಿಂಗ್ ವ್ಯವಸ್ಥೆಗಳ ಸುರಕ್ಷತೆ ಬಗ್ಗೆ ಬೆಸ್ಕಾಂ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ, ದುರಸ್ತಿ ಕಾರ್ಯ ಕೈಗೊಳ್ಳುವ ಮೂಲಕ ಮುಂದಾಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಹಾಗಾದರೆ ಈ ರೀತಿಯ ಸರಣಿ ಸಾವುಗಳನ್ನು ತಡೆಗಟ್ಟುವವರು ಯಾರು..? ಮತ್ತು ಹೇಗೆ..? ಎಂಬ ಯಕ್ಷ ಪ್ರಶ್ನೆ ನಮ್ಮನ್ನು ಕಾಡುತ್ತಿದೆ, ಇದಕ್ಕೆ ಸಂಬಂಧಿಸಿದ ವಿವಿಧ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು ಗ್ರಾಮ ಪಂಚಾಯಿತಿ, ಬೆಸ್ಕಾಂ ಇಲಾಖೆ, ತಾಲ್ಲೂಕು ಆಡಳಿತ, ಹಾಗೂ ಜಿಲ್ಲಾ ಮಟ್ಟದ ಆಡಳಿತ ಅಧಿಕಾರಿಗಳು ಈ ಘಟನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸೂಕ್ತ ತನಿಖೆ ನಡೆಸಿ, ಈ ರೀತಿಯ ಘಟನೆಗಳು ಮರುಕಳಿಸದಂತೆ ಕುಟುಂಬಗಳಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಚಿತ್ರದುರ್ಗದ ದಲಿತ ಸಾಹಿತ್ಯ ಪರಿಷತ್ ನ, ಜಿಲ್ಲಾಧ್ಯಕ್ಷರು ಆದ ಕೋಡಿಹಳ್ಳಿ ಟಿ.ಶಿವಮೂರ್ತಿ ಮನವಿ ಮಾಡಿದ್ದಾರೆ.










