ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 12 : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜರುಗಿದ ಶ್ರೀ ಕೃಷ್ಣನ ಬೃಹತ್ ಮೆರವಣಿಗೆ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಬಸವರಮಾನಂದ ಸ್ವಾಮೀಜಿ ಚಾಲನೆ ನೀಡಿದರು.
ನಗರದ ವೇದಾವತಿ ಬಡವಾಣೆಯ ಎ.ಕೃಷ್ಣಪ್ಪ ಸರ್ಕಲ್ ಸಮೀಪದಲ್ಲಿರುವ ಶ್ರೀಕೃಷ್ಣ ದೇವಸ್ಥಾನ ಮುಂಭಾಗದಲ್ಲಿ ವಿವಿಧ ಹೂವುಗಳಿಂದ ಅಲಂಕರಿಸಿದ ಬೆಳ್ಳಿ ರಥದಲ್ಲಿ ಕೂರಿಸಿದ ಶ್ರೀಕೃಷ್ಣ, ಆಂಜನೇಯ ಹಾಗೂ ಶ್ರೀರಾಮ ಪ್ರತಿಮೆಗೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ಆರಂಭವಾಯಿತು. ಆದರೆ ಡಿಜೆ ಅನುಮತಿ ಸಿಗದ ಹಿನ್ನಲೆಯಲ್ಲಿ 12 ಗಂಟೆಗೆ ಆರಂಭವಾಗಬೇಕಿದ್ದ ಮೆರವಣಿಗೆ ಮಧ್ಯಾಹ್ನ 2 ಗಂಟೆ ನಂತರ ಮೆರವಣಿಗೆ ಆರಂಭವಾಯಿತು.
ಪ್ರತಿವರ್ಷದಂತೆ ಈ ವರ್ಷವು ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕೃಷ್ಣ ಪ್ರತಿಮೆ ಕೂರಿಸಿ ನಿತ್ಯವು ವಿಶೇಷ ಪೂಜೆ ಹಾಗೂ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಶನಿವಾರ ಭವ್ಯ ಮೆರವಣಿಗೆ ಆಯೋಜಿಸಿದ್ದು, ಶ್ರೀಕೃಷ್ಣ ದೇವಸ್ಥಾನದಿಂದ ಹೊರಟ ಬೃಹತ್ ಮೆರವಣಿಗೆ ನೂರು ಅಡಿ ರಸ್ತೆ, ಚಳ್ಳಕೆರೆ ರಸ್ತೆ, ಅಂಬೇಡ್ಕರ್ ವೃತ್ತ, ತಾಲೂಕು ಕಚೇರಿ ಮೂಲಕ ನಗರದೊಳಗೆ ಪ್ರವೇಶಿಸಿತು. ಅಲ್ಲಿಂದ ಗಾಂಧಿ ಸರ್ಕಲ್ ಮೂಲಕ ಆಸ್ಪತ್ರೆ ವೃತ್ತ, ಚರ್ಚ್ ರಸ್ತೆ, ಹುಳಿಯಾರು ರಸ್ತೆ ಮೂಲಕ ಅದೇ ಮಾರ್ಗದಲ್ಲಿ ವಾಪಸ್ ಶ್ರೀಕೃಷ್ಣ ದೇವಸ್ಥಾನ ತಲುಪುವ ಮೂಲಕ ಬೃಹತ್ ಮೆರವಣಿಗೆಗೆ ತೆರೆ ಎಳೆದರು.
ಮೆರವಣಿಗೆಯುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಜನರು ಕಿಕ್ಕಿರಿದು ನೆರೆದು ಮೆರವಣಿಗೆ ಕಣ್ತುಂಬಿಕೊಂಡರು. ಗೊಂಬೆಯಾಟ, ಉರುಮೆವಾದ್ಯ, ತಮಟೆ ವಾದ್ಯ, ವೀರಗಾಸೆ, ಚಂಡಿ ಮದ್ದಾಳೆ, ಡೊಳ್ಳು ಕುಣಿತ ಮುಂತಾದ ವಿವಿಧ ಸಾಂಸ್ಕೃತಿಕ ಕಲಾತಂಡಗಳ ಜತೆಗೆ ಯುವಕರು ನರ್ತಿಸಿದರು. ಅಲ್ಲದೇ ಡಿಜೆ ಸೌಂಡ್ಗೆ ಸಾವಿರಾರು ಯುವಕರು ಮೈಮರೆತು ಕುಣಿದು ಕುಪ್ಪಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಎಂಎಲ್ಸಿ ಡಿಟಿ ಶ್ರೀನಿವಾಸ್, ಮಾಜಿ ಶಾಸಕಿ ಕೆ ಪೂರ್ಣಿಮಾ, ಬಿಜೆಪಿ ತಾಲೂಕು ಅಧ್ಯಕ್ಷ ಕೆ ಅಭಿನಂದನ್, ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ಶ್ರೀ ರಾಜಣ್ಣ, ಬಿಜೆಪಿ ಮುಖಂಡ ಎನ್.ಆರ್. ಲಕ್ಷ್ಮೀಕಾಂತ್, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ ಮಂಜುನಾಥ್, ಮುಖಂಡರಾದ ಎಂ. ರವೀಂದ್ರಪ್ಪ, ಡಿ. ಯಶೋಧರ, ಎಂ. ಜಯಣ್ಣ, ಶಂಕರಮೂರ್ತಿ, ತಾಲೂಕು ಗೊಲ್ಲ ಸಂಘದ ಅಧ್ಯಕ್ಷ ಆರ್. ರಂಗಸ್ವಾಮಿ, ಡಾ. ರಂಗನಾಥ್, ಸುಹಾಸ್ ಸುಧಾಕರ್, ಶಿವರಂಜನಿ ಯಾದವ್, ವಕೀಲ ಶಂಕರಮೂರ್ತಿ, ಆಲೂರು ತಮ್ಮಣ್ಣ, ಶ್ರೀಕೃಷ್ಣ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ಜನರಿದ್ದರು.











