ದಾವಣಗೆರೆ.ಸೆಪ್ಟೆಂಬರ್.13: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನಕಲಿ ಚಿರತೆಯ ಚಿತ್ರ ಸೃಷ್ಟಿಸಿ, ಗ್ರಾಮಸ್ಥರಲ್ಲಿ ತೀವ್ರ ಭೀತಿ ಹುಟ್ಟಿಸಿದ್ದ ಯುವಕನೊಬ್ಬನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ವಾಸನ ಗ್ರಾಮದ ಸುನೀಲ್ (22) ಎಂಬಾತನೇ ಈ ಕಿಡಿಗೇಡಿತನ ಎಸಗಿದ ಯುವಕ. ಈತ ಕಳೆದ ಕೆಲ ದಿನಗಳ ಹಿಂದೆ ನಂದೀಶ್ವರ ಕ್ಯಾಂಪ್ನ ತೋಟವೊಂದರಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂದು ಹೇಳಿ, ಎಐ ಮೂಲಕ ಸೃಷ್ಟಿಸಿದ ಚಿರತೆಯ ನೈಜವೆಂಬಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದನು. ಈ ಫೋಟೋ ವೈರಲ್ ಆಗಿ, ಸ್ಥಳೀಯರಲ್ಲಿ ಭಾರಿ ಆತಂಕ ಮೂಡಿಸಿತ್ತು.
ಚಿರತೆ ಕಾಣಿಸಿಕೊಂಡ ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದರು. ಸ್ಥಳ ಪರಿಶೀಲನೆ ನಡೆಸಿದಾಗ ಯಾವುದೇ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗದ ಕಾರಣ ಅಧಿಕಾರಿಗಳಿಗೆ ತೀವ್ರ ಅನುಮಾನ ಮೂಡಿತ್ತು. ಫೋಟೋದ ಅಸಲಿಯತ್ತಿನ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು, ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಟ್ಟಿದ್ದ ಸುನೀಲ್ನನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಾನೇ ಎಐ ಬಳಸಿ ಚಿರತೆಯ ನಕಲಿ ಚಿತ್ರ ಸೃಷ್ಟಿಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.











