ಚಿತ್ರದುರ್ಗ. ಸೆ.16: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಜಿಲ್ಲೆಯ ಇತರ 6 ತಾಲೂಕುಗಳಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಭೋವಿ ಜನಾಂಗದ ನಿರುದ್ಯೋಗ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗಾವಕಾಶ ಹೆಚ್ಚಿಸುವ ಉದ್ದೇಶದಿಂದ ಉಚಿತ ಟೈಲರಿಂಗ್ ತರಬೇತಿ ಹಾಗೂ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಹಿರಿಯೂರು ತಾಲೂಕಿನಲ್ಲಿ ನಿಗದಿಪಡಿಸಿದ ಗುರಿಗಿಂತ ಕಡಿಮೆ ಅರ್ಜಿಗಳು ಬಂದಿರುವುದರಿಂದ, ಹಿರಿಯೂರು ಸೇರಿದಂತೆ ಚಿತ್ರದುರ್ಗ ಜಿಲ್ಲೆಯ 6 ತಾಲೂಕುಗಳ ಆಸಕ್ತ ಅರ್ಹ ಅಭ್ಯರ್ಥಿಗಳು ಇದೇ ಸೆಪ್ಟೆಂಬರ್ 15 ರಿಂದ ಸೆಪ್ಟೆಂಬರ್ 20 ರೊಳಗೆ ಅಗತ್ಯ ದಾಖಲೆಗಳೊಂದಿಗೆ ನಿಗಮದ ಚಿತ್ರದುರ್ಗ ಜಿಲ್ಲಾ ಕಚೇರಿಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಪರಿಶಿಷ್ಟ ಜಾತಿ ಭೋವಿ ಸಮುದಾಯಕ್ಕೆ ಸೇರಿದ 18 ರಿಂದ 45 ವರ್ಷ ವಯೋಮಿತಿಯ ಕರ್ನಾಟಕದ ನಿವಾಸಿಯಾಗಿರಬೇಕು. ಸ್ಥಳೀಯ ನಿವಾಸದ ದಾಖಲೆಯನ್ನು ಲಗತ್ತಿಸುವುದು ಕಡ್ಡಾಯವಾಗಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿದಿನ 8 ಗಂಟೆಗಳಂತೆ 75 ದಿನಗಳ ಕಾಲ ಪೂರ್ಣ ತರಬೇತಿಗೆ ಕಡ್ಡಾಯವಾಗಿ ಹಾಜರಾಗಬೇಕಿದ್ದು, ಸಂಸ್ಥೆಯ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ನಿಯಮ ಉಲ್ಲಂಘಿಸಿದರೆ ಅರ್ಹತೆಯನ್ನು ರದ್ದುಗೊಳಿಸಲಾಗುವುದು. ತರಬೇತಿ ಯಶಸ್ವಿಯಾಗಿ ಪೂರ್ಣಗೊಂಡ ನಂತರವಷ್ಟೇ ಉಚಿತ ಹೊಲಿಗೆ ಯಂತ್ರ ಉಪಕರಣಗಳನ್ನು ವಿತರಿಸಲಾಗುತ್ತದೆ.
ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಪ್ರತಿ, ನಿವಾಸ ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬಿಪಿಎಲ್ ಕಾರ್ಡ್ ಹಾಗೂ ಪಾಸ್ಪೋಟ ಸೈಜ್ ಫೋಟೋಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅಪೂರ್ಣ ಅಥವಾ ತಪ್ಪು ಮಾಹಿತಿಯುಳ್ಳ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಂಸ್ಥೆಯು ಯಾವುದೇ ಕಾರಣ ಸೂಚಿಸದೆ ಅರ್ಜಿಯನ್ನು ತಿರಸ್ಕರಿಸುವ ಅಥವಾ ಆಯ್ಕೆ ಮಾಡುವ ಹಕ್ಕು ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, 2ನೇ ಮಹಡಿ, ಪಾಲಾಕ್ಷ ಕಾಂಪೌಂಡ್, ಬಿ.ಡಿ. ಮುಖ್ಯ ರಸ್ತೆ, ಐ.ಸಿ.ಐ.ಸಿ.ಐ. ಬ್ಯಾಂಕ್ ಮುಂಭಾಗ, ಚಿತ್ರದುರ್ಗ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.











