ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಜಾತ್ಯಾತೀತ ಪದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಇನ್ನು ಮುಂದೆ ಅವರು ಆ ಪದವನ್ನು ಬಳಸುವುದು ಸೂಕ್ತವಲ್ಲ ಎಂಬಂತೆ ಹೇಳಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.
ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ ‘ಸಿದ್ದಸುಳ್ಳು’ಗಳಿಗೆ ಕೊರತೆಯೇನೂ ಇಲ್ಲ. ‘ಜಾತ್ಯತೀತ ‘ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ @siddaramaiah ನವರೇ?.

ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್’ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ @INCIndia ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?.
ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ?.
2006ರಲ್ಲಿ @BJP4Karnataka ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು @JanataDal_S ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ??.
ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು.
ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?
#ಛದ್ಮವೇಷಧಾರಿ ಎಂದು ಹ್ಯಾಶ್ ಟ್ಯಾಗ್ ಬಳಕೆ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










