ಡಾ.ಬಿ.ಆರ್.ಅಂಬೇಡ್ಕರ್ ಭಾರತಕ್ಕೆ ಸಂವಿಧಾನ ಕೊಟ್ಟ ಮಹಾನ್ ಮಾನವತಾವಾದಿ : ಬಿ.ಟಿ.ಜಗದೀಶ್

2 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.06  : ಡಾ.ಬಿ.ಆರ್.ಅಂಬೇಡ್ಕರ್ ಭಾರತಕ್ಕೆ ಸಂವಿಧಾನವನ್ನು ಕೊಟ್ಟ ಮಹಾನ್ ಮಾನವತಾವಾದಿ ಎಂದು ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಬಿ.ಟಿ.ಜಗದೀಶ್ ಹೇಳಿದರು.

ರಂಗಯ್ಯನಬಾಗಿಲು ಸಮೀಪವಿರುವ ಜಿಲ್ಲಾ ಕುರುಬರ ಸಂಘದಲ್ಲಿ ಬುಧವಾರ ನಡೆದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ 67 ನೇ ಪರಿನಿರ್ವಾಣ ದಿನದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಬುದ್ದ ಅಹಿಂಸೆ ತತ್ವವನ್ನು ಸಮಾಜಕ್ಕೆ ನೀಡಿದರು, ಹನ್ನರಡನೆ ಶತಮಾನದಲ್ಲಿ ಬಸವಣ್ಣ ಅಸಮಾನತೆ ವಿರುದ್ದ ಹೋರಾಡಿದರು. ಭಕ್ತಕನಕದಾಸ ಕೀರ್ತನೆಗಳ ಮೂಲಕ ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರ ಬಲ್ಲಿರ ಎಂದು ಜಾತಿಯತೆ ನಿರ್ಮೂಲನೆಗಾಗಿ ಶ್ರಮಿಸಿದರು.

ಬಾಲ್ಯದಿಂದಲೂ ಅನೇಕ ನೋವು, ಸಂಕಟ, ಹಿಂಸೆ, ಅವಮಾನಗಳನ್ನು ಅನುಭವಿಸಿದ ಡಾ.ಬಿ.ಆರ್.ಅಂಬೇಡ್ಕರ್ ವಿದೇಶಗಳಲ್ಲಿ ಶಿಕ್ಷಣ ಪಡೆದು ಭದ್ರವಾದ ಸಂವಿಧಾನವನ್ನು ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದ ಫಲವಾಗಿ ದಲಿತರು, ಹಿಂದುಳಿದವರು, ಶೋಷಿತರು, ಅಲ್ಪಸಂಖ್ಯಾತರು ನೆಮ್ಮದಿಯಾಗಿ ಜೀವಿಸುತ್ತಿದ್ದಾರೆಂದರು.

ಮುಂದಿನ ದಿನಗಳಲ್ಲಿ ಎಲ್ಲಾ ದಾರ್ಶನಿಕರ ಜಯಂತಿಯನ್ನು ಜಿಲ್ಲಾ ಕುರುಬರ ಸಂಘದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು. ಇದರಿಂದ ಬೇರೆ ಜಾತಿ ಧರ್ಮದವರನ್ನು ಅಪ್ಪಿಕೊಂಡಂತಾಗುತ್ತದೆ ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ ಶತ ಶತಮಾನಗಳಿಂದ ತುಳಿತಕ್ಕೊಳಗಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಶೋಷಿತರನ್ನು ಮೇಲಕ್ಕೆತ್ತುವುದಕ್ಕಾಗಿಯೇ ಡಾ.ಬಿ.ಆರ್.ಅಂಬೇಡ್ಕರ್‍ರವರು ಸಂವಿಧಾನವನ್ನು ರಚಿಸಿ ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳು ಕಳೆದಿದ್ದರೂ ಇನ್ನು ಸಂವಿಧಾನದ ಆಶಯಗಳು ಸಂಪೂರ್ಣವಾಗಿ ಜಾರಿಗೆ ಬಂದಿಲ್ಲ. ಸಂವಿಧಾನದ ಪ್ರತಿಗಳನ್ನು ಪ್ರತಿ ಮನೆ ಮನೆಗಳಿಗೆ ಮುಟ್ಟಿಸಿ ಸಂವಿಧಾನದ ಮಹತ್ವ ಕುರಿತು ಜನತೆಯಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

ಸಂವಿಧಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯಾರನ್ನು ಕಡೆಗಣಿಸಿಲ್ಲ. ಎಲ್ಲರಿಗೂ ಸಮಾನತೆ ಕಲ್ಪಿಸಿದ್ದಾರೆ. ಸಂವಿಧಾನ ರಕ್ಷಿಸಬೇಕಿದೆ. ಕಾಂತರಾಜ್ ವರದಿ ಜಾರಿಗೆ ಒತ್ತಾಯಿಸಿ ಡಿ.12 ರಂದು ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ನುಡಿದರು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್ ಮಾತನಾಡುತ್ತ ಮುಂದಿನ ದಿನಗಳಲ್ಲಿ ಎಲ್ಲಾ ಮಹಾಪುರುಷರ ಮತ್ತು ದಾರ್ಶನಿಕರ ಜಯಂತಿಯನ್ನು ಜಿಲ್ಲಾ ಕುರುಬರ ಸಂಘದಿಂದ ಆಚರಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್‍ರವರು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು. ಇದರಿಂದ ಆಯಾ ಜಾತಿಗನುಗುಣವಾಗಿ ಮೀಸಲಾತಿ ಸಿಗಲಿದೆ ಎಂದು ಹೇಳಿದರು.

ಜಿಲ್ಲಾ ಕುರುಬರ ಸಂಘದ ಗೌರವಾಧ್ಯಕ್ಷ ಹೆಚ್.ಮಂಜಪ್ಪ, ಖಜಾಂಚಿ ಮುತ್ತು, ಮಾಳೇಶ್, ದೇವಣ್ಣ, ಪ್ರಭಣ್ಣ, ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಇನ್ನು ಮುಂತಾದವರು ಅಂಬೇಡ್ಕರ್ ಪರಿನಿರ್ವಾಣ ದಿನದಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks