ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.25 : ಅವಕಾಶ ವಂಚಿತರ ಧ್ವನಿಯಾಗಿ ಹೋರಾಡಿದ ಮುರುಘರಾಜೇಂದ್ರ ಒಡೆಯರ್ರವರಲ್ಲಿ ರಾಜಕಾರಣಿಗಳು, ಅಧಿಕಾರಿಗಳನ್ನು ಗಟ್ಟಿಯಾಗಿ ಪ್ರಶ್ನಿಸುವ ಎದೆಗಾರಿಕೆಯಿತ್ತು ಎಂದು ಸಾಮಾಜಿಕ ಚಿಂತಕ ಜೆ.ಯಾದವರೆಡ್ಡಿ ಹೇಳಿದರು.

ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ, ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ, ಭ್ರಷ್ಟಾಚಾರ ವಿರೋಧಿ ಸೇನೆ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಮುರುಘರಾಜೇಂದ್ರ ಒಡೆಯರ್ ಒಂದು ನೆನಪು ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಬಹಳಷ್ಟು ಹೋರಾಟಗಾರರಿದ್ದಾರೆ. ಅದರಲ್ಲಿ ಕೆಲವೆ ಕೆಲವರು ಎಲ್ಲರ ಮನದಲ್ಲಿ ಉಳಿದಿದ್ದಾರೆ. ಅಂತಹವರಲ್ಲಿ ಮುರುಘರಾಜೇಂದ್ರ ಒಡೆಯರ್, ದಲಿತ ನಾಯಕ ಎಂ.ಜಯಣ್ಣ, ಸದಾನಂದಯ್ಯ, ಟಿ.ನುಲೇನೂರು ಶಂಕರಪ್ಪ ಪ್ರಮುಖರು. ಚಿಕ್ಕವಯಸ್ಸಿನಲ್ಲಿಯೇ ರಾಜಕಾರಣ ಪ್ರವೇಶಿಸಿದ ಮುರುಘರಾಜೇಂದ್ರ ಒಡೆಯರ್ ಎಲ್ಲಿಯೂ ಅಡ್ಡದಾರಿ ಹಿಡಿಯಲಿಲ್ಲ. ಅಹಿಂದ ವರ್ಗಕ್ಕೆ ಅನ್ಯಾಯವಾದರೆ ಅಲ್ಲಿ ಹೋರಾಟಕ್ಕೆ ಇಳಿಯುತ್ತಿದ್ದರು. ಹಿಂದುಳಿದ ವರ್ಗಗಳ ಪರವಾಗಿ ಕರಾರುವಕ್ಕಾಗಿ ಅಂಕಿ ಅಂಶಗಳನ್ನಿಟ್ಟುಕೊಂಡು ಹೋರಾಟ ಮಾಡಿದ ಧೀಮಂತ ನಾಯಕ ಎಂದು ಸ್ಮರಿಸಿದರು.
ಅಹಿಂದ ವರ್ಗಕ್ಕೆ ಜನಸಂಖ್ಯೆಗನುಗುಣವಾಗಿ ಸರ್ಕಾರದಿಂದ ಸೌಲಭ್ಯ ಸಿಕ್ಕಿಲ್ಲ ಎನ್ನುವ ಕೊರಗು ಅವರನ್ನು ಕಾಡುತ್ತಿತ್ತು. ರಾಜಿ ರಾಜಕಾರಣ ಎಂದಿಗೂ ಮಾಡಲಿಲ್ಲ. ಕೈ ಬಾಯಿ ಪರಿಶುದ್ದವಾಗಿದ್ದರಿಂದ ಯಾರಿಗೂ ಹೆದರದೆ ಅನ್ಯಾಯವನ್ನು ಖಂಡಿಸುವ ಛಲ, ಧೈರ್ಯ ಅವರಲ್ಲಿತ್ತು. ಜಾತಿ ಗಣತಿಯನ್ನು ಎರಡು ಪ್ರಬಲ ಜಾತಿಗಳು ವಿರೋಧಿಸುತ್ತಿರುವ ಇಂದಿನ ಸಂದರ್ಭಕ್ಕೆ ಮುರುಘರಾಜೇಂದ್ರ ಒಡೆಯರ್ ಇರಬೇಕಿತ್ತು.
ಗೋಕಾಕ್ ಚಳುವಳಿಯಲ್ಲಿ ಭಾಗವಹಿಸಿದ್ದ ಒಡೆಯರ್ ಕನ್ನಡದ ಕಟ್ಟಾಳುವಾಗಿದ್ದರು. ಜೆ.ಹೆಚ್.ಪಟೇಲ್, ರಾಮಕೃಷ್ಣಹೆಗಡೆ, ಬೊಮ್ಮಾಯಿ, ಹೆಚ್.ಡಿ.ದೇವೇಗೌಡರ ಜೊತೆ ನಿಕಟ ಸಂಪರ್ಕವಿಟ್ಟುಕೊಂಡಿದ್ದರೂ ಎಲ್ಲಿಯೂ ಯಾರನ್ನು ದುರುಪಯೋಗಪಡಿಸಿಕೊಳ್ಳಲಿಲ್ಲ. ಅಂತಹ ಹೋರಾಟಗಾರನ ಆದರ್ಶ, ತತ್ವ, ಸಿದ್ದಾಂತ, ಮೌಲ್ಯಗಳಂತೆ ಈಗಿನ ಹೋರಾಟಗಾರರು ಸಾಗಬೇಕು ಎಂದು ತಿಳಿಸಿದರು.
ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್ ಮಾತನಾಡಿ ಹೋರಾಟಗಾರರಿಗೆ ಕೌಟುಂಬಿಕ, ಆರ್ಥಿಕ, ಸಾಮಾಜಿಕ ಭದ್ರೆತೆಯಿಲ್ಲದಂತಾಗಿದೆ. ಮುರುಘರಾಜೇಂದ್ರ ಒಡೆಯರ್ ದಿಟ್ಟ ಹೋರಾಟಗಾರರಾಗಿದ್ದರು. ಲೋಹಿಯಾವಾದ, ಸಮಾಜವಾದದ ಸಿದ್ದಾಂತವನ್ನು ಅಳವಡಿಸಿಕೊಂಡಿದ್ದ ಒಡೆಯರ್ ಹೋರಾಟದ ಮೂಲಕವೇ ಗುರುತಿಸಿಕೊಂಡವರು. ಪ್ರತಿಯೊಬ್ಬರು ಹಕ್ಕುಗಳಿಗಾಗಿ ಹೋರಾಡಬೇಕಿದೆ. ಜಾತಿಗಣತಿ ವರದಿ ಬಿಡುಗಡೆಯಾದರೆ ಅಹಿಂದ ವರ್ಗದ ಎಲ್ಲಾ ಜಾತಿಗಳಿಗೆ ಸಿಗಬೇಕಾದ ಸಮಪಾಲು ದೊರಕುತ್ತದೆ ಎಂದು ಹೇಳಿದರು.
ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡುತ್ತ ಮುರುಘರಾಜೇಂದ್ರ ಒಡೆಯರ್ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದರು. ಕುಟುಂಬದ ಬಗ್ಗೆ ಎಂದಿಗೂ ಚಿಂತೆ ಮಾಡಿದವರಲ್ಲ. ಅಹಿಂದ ಪರವಾಗಿ ಹೋರಾಡುತ್ತಿದ್ದ ಅವರು ನಿಷ್ಠುರವಾಗಿ ಮಾತನಾಡುತ್ತಿದ್ದರು. ಯಾರ ಮುಲಾಜಿಗೂ ಒಳಗಾಗುತ್ತಿರಲಿಲ್ಲ. ಅಂತಹ ಧೀಮಂತ ನಾಯಕ ಎಂದು ಗುಣಗಾನ ಮಾಡಿದರು.

ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್ವುಲ್ಲಾ ಮಾತನಾಡಿ ಹೋರಾಟದ ಮೂಲಕ ಇಂದಿಗೂ ಒಡೆಯರ್ ಎಲ್ಲರ ಮನದಲ್ಲಿ ಉಳಿದಿದ್ದಾರೆ. ಅಹಿಂದ ಪರವಾಗಿದ್ದ ಅವರು ಎಲ್ಲಿ ಅನ್ಯಾಯವಾಗುತ್ತದೋ ಅಲ್ಲಿ ಹೋರಾಟದ ಮುಂಚೂಣಿಯಲ್ಲಿರುತ್ತಿದ್ದರು. ಸರ್ಕಾರ ಒಡೆಯರ್ ಕುಟುಂಬಕ್ಕೆ ಒಂದು ನಿವೇಶನ ನೀಡಬೇಕೆಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ ಮಾತನಾಡುತ್ತ ವಿದ್ಯಾರ್ಥಿ ದೆಸೆಯಲ್ಲಿಯೇ ಹೋರಾಟದ ಗುಣ ಬೆಳೆಸಿಕೊಂಡಿದ್ದ ಮುರುಘರಾಜೇಂದ್ರ ಒಡೆಯರ್ ಸದಾ ಅಹಿಂದ ಪರವಾಗಿರುತ್ತಿದ್ದರು. ರಾಜಿ ಸ್ವಭಾವದವರಲ್ಲ. ಅವರ ಹೆಸರಿನಲ್ಲಿ ನಗರದಲ್ಲಿ ಎಲ್ಲಿಯಾದರೂ ಸ್ಮಾರಕ ನಿರ್ಮಾಣವಾಗಬೇಕೆಂದು ಸಲಹೆ ನೀಡಿದರು.
ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾಧ್ಯಕ್ಷ ಗಣೇಶ್ ಅಧ್ಯಕ್ಷತೆ ವಹಿಸಿದ್ದರು.
ರೆವೆರಂಡ್ ಫಾದರ್ ಎಂ.ಎಸ್.ರಾಜು, ಸಾಹಿತಿ ಪರಶುರಾಮ್ ಗೊರಪ್ಪರ್, ಟಿ.ತಿಪ್ಪೇಸ್ವಾಮಿ ಸಂಪಿಗೆ. ಪಾರ್ಥರಾಜೇಂದ್ರ ಒಡೆಯರ್, ಕರ್ನಾಟಕ ಶಾಂತಿ ಮತ್ತು ಸೌಹಾರ್ಧ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್ಕುಮಾರ್, ಸವಿತಾ ಸಮಾಜದ ಹಿರಿಯ ಮುಖಂಡ ಓ.ನರಸಿಂಹಮೂರ್ತಿ, ಬಡಗಿ ಕೆಲಸಗಾರರ ಸಂಘದ ಅಧ್ಯಕ್ಷ ಎ.ಜಾಕೀರ್ ಹುಸೇನ್, ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ಎಂ.ಹನೀಫ್ ವೇದಿಕೆಯಲ್ಲಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















