5 ನೇ ದಿನಕ್ಕೆ ಮುಂದುವರಿದ ಪ್ರತಿಭಟನೆ | ಉಗ್ರ ಸ್ವರೂಪದ ಹೋರಾಟ, ರೈತರ ಎಚ್ಚರಿಕೆ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.09 : ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಕಾಯ್ದಿರಿಸಿರುವ ಕೇಂದ್ರ ಸರ್ಕಾರ ಹಣ ಬಿಡುಗಡೆಗೊಳಿಸದಿರುವುದನ್ನು ವಿರೋಧಿಸಿ ಕಳೆದ ಐದು ದಿನಗಳಿಂದಲೂ ಜಿಲ್ಲಾ ಪಂಚಾಯಿತಿ ಮುಂಭಾಗ ಧರಣಿ ನಡೆಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ, ಅಖಂಡ ಕರ್ನಾಟಕ ರೈತ ಸಂಘ ಹಾಗೂ ವಿವಿಧ ಜನಪರ ಸಂಘಟನೆಗಳವರು ಶುಕ್ರವಾರ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ ಸದಾ ಬರಗಾಲವನ್ನೆ ಎದುರಿಸುತ್ತಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು ಸಾಲಗಾರರಾಗಿ ಹೈರಾಣಾಗಿದ್ದಾರೆ. ಕಳೆದ ಮೂವತ್ತು ನಲವತ್ತು ವರ್ಷಗಳಿಂದಲೂ ನೀರಾವರಿ ಯೋಜನೆಗಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ರೈತರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಗುರವಾಗಿ ಕಾಣುತ್ತಿವೆ. ಭದ್ರಾಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ಕೇಂದ್ರ ಸರ್ಕಾರ ಕಾಯ್ದಿರಿಸಿರುವ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಕೂಡಲೆ ಬಿಡುಗಡೆಗೊಳಿಸಿ ಕಾಮಗಾರಿಗೆ ಚುರುಕು ಮುಟ್ಟಿಸಿ ನೀರು ಹರಿಸಬೇಕು.
ಇಲ್ಲವಾದಲ್ಲಿ ಧರಣಿಯನ್ನು ಉಗ್ರ ಸ್ವರೂಪಕ್ಕೆ ಕೊಂಡೊಯ್ಯಲಾಗುವುದೆಂದು ಎಚ್ಚರಿಸಿದರು.

ರೈತ ಮುಖಂಡ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಯ ರೈತರು ಮಳೆಯನ್ನೇ ಆಧರಿಸಿ ಕೃಷಿಯನ್ನು ನಂಬಿಕೊಂಡಿದ್ದಾರೆ. ಇಂತಹ ಸಂಕಷ್ಠದ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಭದ್ರಾಮೇಲ್ದಂಡೆ ಯೋಜನೆಗಾಗಿ ಕಾಯ್ದಿರಿಸಿರುವ ಹಣವನ್ನು ಬಿಡುಗಡೆಗೊಳಿಸಲು ಮೀನಾ ಮೇಷ ಎಣಿಸುತ್ತಿದೆ. ರೈತರನ್ನು ತಿರಸ್ಕಾರ ಮನೋಭಾವದಿಂದ ಕಾಣುವುದು ಸರಿಯಲ್ಲ. ಕೂಡಲೆ ಯೋಜನೆಯನ್ನು ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸಬೇಕೆಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಹನುಮೇಶ್ ಟಿ.ಎಮ್ಮಿಗನೂರು, ರಂಗಸ್ವಾಮಿ, ವಿಜಯಕುಮಾರ್, ಗೌರಮ್ಮ, ಅನುಸೂಯಮ್ಮ, ಮಂಜುಳ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *