Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ ಮೂಡಿಸುವುದು ಕಾರ್ಮಿಕ ದಿನಾಚರಣೆ ಉದ್ದೇಶ ಎಂದು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಬಿ.ಗೀತ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಮಾಳಪ್ಪನಹಟ್ಟಿ ರಸ್ತೆಯಲ್ಲಿರುವ ಅರವಿಂದ ಗಾರ್ಮೆಂಟ್ಸ್‍ನಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗಾಗಿ ಗುರುವಾರ ಏರ್ಪಡಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಮೇರಿಕಾದ ಚಿಕಾಗೋ ನಗರದಲ್ಲಿ 1881 ರಲ್ಲಿ ಮೊಟ್ಟ ಮೊದಲ ಬಾರಿಗೆ ಕಾರ್ಮಿಕರು ತಮ್ಮ ನ್ಯಾಯಯುತವಾದ ಬೇಡಿಕೆಗಳ ಈಡೇರಿಕೆಗಾಗಿ ದೊಡ್ಡ ಚಳುವಳಿ ಆರಂಭಿಸಿದಾಗ ಅನೇಕ ಸಾವು-ನೋವುಗಳು ಸಂಭವಿಸಿತು. ಅಂದಿನಿಂದ ಪ್ರತಿ ವರ್ಷ ಮೇ. 1 ರಂದು ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ನಿರ್ಧಿಷ್ಠವಾದ ಸಮಯವಿಲ್ಲದೆ ಹಗಲು-ರಾತ್ರಿ ಕಾರ್ಮಿಕರು ದುಡಿಯಬೇಕಿತ್ತು. ಕೆಲಸಕ್ಕೆ ತಕ್ಕಂತೆ ವೇತನವಿರುತ್ತಿರಲಿಲ್ಲ. ಕಾಲ ಕಾಲಕ್ಕೆ ಸರಿಯಾಗಿ ಸಿಗಬೇಕಾದ ಸೌಲತ್ತುಗಳಿಂದ ಕಾರ್ಮಿಕರು ವಂಚನೆಗೊಳಗಾಗುತ್ತಿದ್ದರು. ವಿಶ್ರಾಂತಿಯಿಲ್ಲದೆ ಕಾರ್ಮಿಕರು ದುಡಿಯಬೇಕಾಗಿತ್ತು. ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕರು ನಡೆಸಿದ ಬೃಹತ್ ಚಳುವಳಿಯಿಂದಾಗಿ ಅನೇಕ ಕಾನೂನುಗಳನ್ನು ಜಾರಿಗೊಳಿಸಲಾಯಿತು. ನಾನಾ ರೀತಿಯ ತೊಂದರೆ ಸವಾಲುಗಳನ್ನು ಎದುರಿಸುತ್ತಿದ್ದ ಕಾರ್ಮಿಕರಿಗಾಗಿ ಯವ್ಯಾವ ಕಾನೂನುಗಳಿವೆ ಎನ್ನುವ ಅರಿವು ಮೂಡಿಸುವುದೇ ಕಾರ್ಮಿಕ ದಿನಾಚರಣೆಯ ಉದ್ದೇಶ ಎಂದರು.

ಯಾವುದೇ ಒಂದು ಸುಂದರವಾದ ಕಟ್ಟಡವನ್ನು ನೋಡಿ ಸಂತೋಷಪಡುವವರು ಕಟ್ಟಡ ನಿರ್ಮಾಣದ ಹಿಂದಿರುವ ಕಾರ್ಮಿಕರ ಪರಿಶ್ರಮವನ್ನು ಗುರುತಿಸುವುದಿಲ್ಲ. ಎಲ್ಲಿ ಕಾರ್ಮಿಕರ ಶ್ರಮವನ್ನು ಗೌರವಿಸಲಾಗುತ್ತದೋ ಅಂತಹ ಕಡೆ ಅಭಿವೃದ್ದಿ ಕಾಣಬಹುದು. ಯಾವುದೇ ಒಂದು ಕಟ್ಟಡ ಸುಭದ್ರವಾಗಿದ್ದು, ಬಹಳ ದಿನಗಳ ಕಾಲ ಬಾಳಿಕೆ ಬರಬೇಕಾದರೆ ಅಡಿಪಾಯ ಮುಖ್ಯ. ಹಾಗಾಗಿ ಕಟ್ಟಡ ಕಾರ್ಮಿಕರ ಕೆಲಸಕ್ಕೆ ಮಹತ್ವವಿದೆ. ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಟ್ಟು ಸುವ್ಯವಸ್ಥಿತ ಜೀವನ ನಡೆಸುವಂತೆ ಶ್ರೀಮತಿ ಬಿ.ಗೀತ ಕರೆ ನೀಡಿದರು.

ಕಾರ್ಮಿಕ ಅಧಿಕಾರಿ ಬಿ.ಜಿ.ಚಂದ್ರಶೇಖರಯ್ಯ ಮಾತನಾಡಿ ಕಟ್ಟಡ ಕಾರ್ಮಿಕರ ಸೌಲಭ್ಯಗಳನ್ನು ಗಾರ್ಮೆಂಟ್ಸ್‍ನಲ್ಲಿ ಕೆಲಸ ಮಾಡುವವರು ತೆಗೆದುಕೊಳ್ಳಬಾರದು. ಒಂದು ವೇಳೆ ಕಾರ್ಡ್ ತೆಗೆದುಕೊಂಡಿದ್ದರೆ ಇಲಾಖೆಗೆ ಹಿಂದಿರುಗಿಸಿ. ಇಲ್ಲವಾದಲ್ಲಿ ಎಫ್.ಐ.ಆರ್. ದಾಖಲಿಸಲಾಗುವುದೆಂದು ಎಚ್ಚರಿಸಿದರು.

1996 ರಲ್ಲಿ ಕಾಯಿದೆ ಬಂದ ನಂತರ ಕಾರ್ಮಿಕರಿಗೆ ಅನೇಕ ರೀತಿಯ ಸೌಲತ್ತುಗಳನ್ನು ನೀಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಕಾರ್ಮಿರಿಗೆ ಫುಡ್ ಕಿಟ್ ಸೇರಿದಂತೆ ನಾನಾ ರೀತಿಯ ಸಲಕರಣೆಗಳನ್ನು ನೀಡಲಾಯಿತು. ಕಾರ್ಮಿಕರ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಸರ್ಕಾರ ಈ ಶ್ರಮ್ ಯೋಜನೆಯನ್ನು ತಂದಾಗ 38 ಲಕ್ಷ ಅಸಂಘಟಿತ ಕಾರ್ಮಿಕರು ನೊಂದಾಯಿಸಿಕೊಂಡಿದ್ದಾರೆ. ಎರಡು ಲಕ್ಷ ರೂ.ಗಳ ವಿಮೆ ಸೌಲಭ್ಯವಿದೆ. ನೀವು ಕೆಲಸ ಮಾಡುವ ಜಾಗದಲ್ಲಿ ಏನಾದರೂ ಲೈಂಗಿಕ ಕಿರುಕುಳವಾದರೆ ಸಂಬಂಧಪಟ್ಟವರಲ್ಲಿ ಶೇರ್ ಮಾಡಿಕೊಂಡು ರಕ್ಷಣೆ ಪಡೆದುಕೊಳ್ಳಿ. ಕಾರ್ಮಿಕ ಇಲಾಖೆಯಿಂದ ಅನೇಕ ಸೌಲಭ್ಯಗಳಿವೆ. ಕಾಯಿದೆ ಹೇಳಿದ್ದೆಲ್ಲವನ್ನು ಕೇಳಿ. ಆದರೆ ಯಾವುದು ಸರಿ ತಪ್ಪು ಎನ್ನುವ ನಿರ್ಧಾರ ತೆಗೆದುಕೊಳ್ಳುವುದು ನಿಮ್ಮ ಕೈಯಲ್ಲಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಕಾರ್ಮಿಕರ ಹಕ್ಕುಗಳ ಕುರಿತು ಮಾತನಾಡಿದರು.

ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ, ಅರವಿಂದ ಗಾರ್ಮೆಂಟ್ಸ್‍ನ ಚೀಫ್ ಮ್ಯಾನೇಜರ್ ಆರ್.ಮುತ್ತುಕುಮಾರ್ ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment