ಡಿ.ಟಿ.ಶ್ರೀನಿವಾಸ್‍ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ : ಪುಟ್ಟಣ್ಣಯ್ಯ

2 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 26 : ಶಿಕ್ಷಕರುಗಳ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಬೇಕಾಗಿರುವುದರಿಂದ ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್‍ರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ವಿಧಾನಪರಿಷತ್ ಸದಸ್ಯ ಪುಟ್ಟಣ್ಣಯ್ಯ ಶಿಕ್ಷಕರುಗಳಲ್ಲಿ ಮನವಿ ಮಾಡಿದರು.

ಖಾಸಗಿ ಹೋಟೆಲ್‍ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೂರು ಬಾರಿ ನಾನು ಬೆಂಗಳೂರು ಕ್ಷೇತ್ರದಿಂದ ಆಯ್ಕೆಯಾಗಿದ್ದು, ವಿದ್ಯಾರ್ಥಿ ದೆಸೆಯಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇನೆ. ಏಳನೆ ವೇತನ ಆಯೋಗ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಬಿಜೆಪಿ. ಜೆಡಿಎಸ್. ಸರ್ಕಾರ ಅಧಿಕಾರದಲ್ಲಿದ್ದಾಗ ಓ.ಪಿ.ಎಸ್.ತೆಗೆದು ಎನ್.ಪಿ.ಎಸ್. ಜಾರಿಗೆ ತಂದಿತು. ಯಾವುದೇ ಸರ್ಕಾರ ಉಳಿಯಬೇಕಾದರೆ ಚಳುವಳಿಗಾರರ ಜೊತೆ ಸಂದಾನಕ್ಕೆ ಸಿದ್ದರಾಗಿರಬೇಕು. ಶಿಕ್ಷಕರುಗಳಿಗೆ ಬಡ್ತಿ, ವೇತನ ಸಮಸ್ಯೆಯಿದೆ. 2015 ರ ನಂತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಕೊಡಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ.

ಪ್ರತಿ ಕುಟುಂಬಕ್ಕೆ 25 ಲಕ್ಷ ರೂ.ಆರೋಗ್ಯ ವಿಮೆ ಕೊಡಿಸುವುದು ನಮ್ಮ ಮುಂದಿರುವ ಬೇಡಿಕೆ. ಅತಿಥಿ ಉಪನ್ಯಾಸಕರುಗಳ ವೇತನ ಹೆಚ್ಚಿಸಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರು 1971 ರಿಂದಲೂ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದು, ಸಾವಿರಾರು ಶಿಕ್ಷಕರುಗಳಿಗೆ ಕೆಲಸ ಕೊಟ್ಟಿದ್ದಾರೆ. ಹಾಗಾಗಿ ಮುಂದಿನ ತಿಂಗಳು ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಜಯಶಾಲಿಯನ್ನಾಗಿ ಮಾಡಿ ನಿಮ್ಮಗಳ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಿ ಎಂದು ಶಿಕ್ಷಕರುಗಳಲ್ಲಿ ಪುಟ್ಟಣ್ಣಯ್ಯ ವಿನಂತಿಸಿದರು.

 

ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ ವಿಧಾನಪರಿಷತ್‍ನಲ್ಲಿ ಕಾಂಗ್ರೆಸ್ ಸ್ಥಾನಗಳ ಸಂಖ್ಯೆ ಕಡಿಮೆಯಿದೆ. ಹಾಗಾಗಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಟಿ.ಶ್ರೀನಿವಾಸ್‍ರವರನ್ನು ಬಹುಮತಗಳಿಂದ ಗೆಲ್ಲಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರುಗಳು ಶಿಕ್ಷಕರುಗಳ ಪರವಾಗಿದ್ದಾರೆ. ಶಿಕ್ಷಕರುಗಳ ಸಮಸ್ಯೆಗಳನ್ನು ಬಗೆಹರಿಸಿ ಸರ್ವತೋಮುಖ ಅಭಿವೃದ್ದಿ ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಬದ್ದವಾಗಿದೆ. ಪುಟ್ಟಣ್ಣಯ್ಯ ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್‍ನವಾಜ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ, ಹನುಮಂತಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *