Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ಅತೀ ಉದ್ದದ ಮಾನವ ಸರಪಳಿ ರಚನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

Facebook
Twitter
Telegram
WhatsApp

 

ಚಿತ್ರದುರ್ಗ. ಸೆ.13: ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇದೇ ಸೆ.15 ರಂದು ರಾಜ್ಯದಲ್ಲಿ ನಿರ್ಮಾಣ ಮಾಡುತ್ತಿರುವ ಮಾನವ ಸರಪಳಿ ವಿಶ್ವದಾಖಲೆಯಾಗಲಿದೆ. ಅಂದು ಜಿಲ್ಲೆಯಲ್ಲಿ ನಿರ್ಮಿಸುತ್ತಿರುವ 145 ಕಿ.ಮೀ ಉದ್ದದ ಮಾನವ ಸರಪಳಿ ರಾಜ್ಯದ ಇತರೆ ಜಿಲ್ಲೆಗಳ ಪೈಕಿ ಚಿತ್ರದುರ್ಗ ಅತೀ ಉದ್ದದ ಮಾನವ ಸರಪಳಿಯಾಗಿದ್ದು, ಅಂದಾಜು 1.50 ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಂಬಂಧ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಅತೀ ಉದ್ದದ ಮಾನವ ಸರಪಳಿ ರಚನೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಲಾಗುತ್ತಿದ್ದು, ಜತೆಗೆ ಸಸಿ ನೆಡುವ ಕಾರ್ಯಕ್ರಮ ಆಯೋಜನೆಗೆ ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದರು. ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಬೆಳಿಗ್ಗೆ 9.30 ರಿಂದ 10.30 ರವರೆಗೆ ಮಾನವ ಸರಪಳಿ ನಿರ್ಮಾಣ ಮಾಡಲಾಗುವುದು. ಕರ್ನಾಟಕ ಉತ್ತರ ತುದಿಯಿಂದ ದಕ್ಷಿಣ ತುದಿಯವರೆಗೆ ಅಂದರೆ ಬೀದರ್‍ನಿಂದ ಚಾಮರಾಜನಗರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳು ಸಂಪರ್ಕ ಕಲ್ಪಿಸುವ ರೀತಿಯಲ್ಲಿ  ಸುಮಾರು 25 ಲಕ್ಷ ಜನರು ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲು ಸರ್ಕಾರ ನಿರ್ಧರಿಸಿದೆ.

 

ಪ್ರಜಾಪ್ರಭುತ್ವವು ಸಮಾನತೆ, ಸ್ವಾತಂತ್ರ್ಯ ಮತ್ತು ಭಾತೃತ್ವದ ಆದರ್ಶಗಳು ಭಾರತೀಯ ಸಂವಿಧಾನ ಪೀಠಿಕೆಯ ಭಾಗ. ಪ್ರಜಾಪ್ರಭುತ್ವದ ಅಂಶಗಳನ್ನು ಪ್ರತಿಯೊಬ್ಬರಿಗೂ ಮುಟ್ಟಿಸುವ ಕಾಳಜಿಯಿಂದ ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ಪ್ರಜಾಪ್ರಭುತ್ವ ಮೌಲ್ಯ ಗೌರವಿಸುವಂತಹ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಗಡಿಭಾಗ ಮೊಳಕಾಲ್ಮುರು ತಾಲ್ಲೂಕಿನ ಮೇಲಿನ ಕಣಿವೆ ಗ್ರಾಮದಿಂದ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿಯವರೆಗೆ ಚಿತ್ರದುರ್ಗ ಗಡಿ ಮುಕ್ತಾಯದವರಗೆ ಮಾನವ ಸರಪಳಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಎಲ್ಲ ರೀತಿಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಸುಮಾರು 1.20 ಲಕ್ಷ ಜನರು ಭಾಗವಹಿಸಲಿದ್ದಾರೆ. ಈ ಕುರಿತು ಕಳೆದ ವಾರದಿಂದಲೂ ಎಲ್ಲ ತಾಲ್ಲೂಕುಗಳಲ್ಲಿಯೂ ನಿರಂತರವಾಗಿ ಸಭೆಗಳನ್ನು ನಡೆಸಿ, ಅಧಿಕಾರಿಗಳು, ನೌಕರರು, ಸಾರ್ವಜನಿರು, ಸಂಘ ಸಂಸ್ಥೆಳ ಜೊತೆ ಸಂಪರ್ಕ ಸಾಧಿಸಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನವಿ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಸೆ.15ರಂದು ಬೆಳಿಗ್ಗೆ 9.30 ರಿಂದ 10.30 ರವರೆಗೆ ನಡೆಯಲಿದೆ. ಬೆಳಿಗ್ಗೆ 9.30 ರಿಂದ 9.37 ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲುವುದು, ಬೆಳಿಗ್ಗೆ 9.37 ರಿಂದ 9.40 ನಾಡಗೀತೆ, ಬೆಳಿಗ್ಗೆ 9.41 ರಿಂದ 9.55 ರವರೆಗೆ ಮುಖ್ಯ ಅತಿಥಿಗಳ ಭಾಷಣ, ಬೆಳಿಗ್ಗೆ 9.55 ರಿಂದ 9.57 ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು, ಬೆಳಿಗ್ಗೆ 9.57 ರಿಂದ 9.59 ರವರೆಗೆ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವುದು ಆ ಸಂದರ್ಭದಲ್ಲಿ ಡ್ರೋನ್ ಶೂಟ್, ವಿಡಿಯೋಗ್ರಾಫಿ ಮಾಡಲಾಗುವುದು. ಬೆಳಿಗ್ಗೆ 10ಕ್ಕೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಜೈ ಹಿಂದ್ ಕೈ ಕರ್ನಾಟಕ ಘೋಷಣೆ ಕೂಗಿ ಸರಪಳಿ ಕಳಚುವುದು, ನಂತರ ಕಾರ್ಯಕ್ರಮ ಮುಕ್ತಾಯವಾಗುವುದು.  ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ. ರಾಜ್ಯಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮ ನಡೆಯುವುದರಿಂದ ಮಾನವ ಸರಪಳಿ ಕಾರ್ಯಕ್ರಮ ಗಿನ್ನೆಸ್ ದಾಖಲೆಯಾಗಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಜಿಲ್ಲೆಯಲ್ಲಿ 145 ಕಿ.ಮೀ ಮಾನವ ಸರಪಳಿ:
ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನಲ್ಲಿ ಅಂದಾಜು 55 ಕಿ.ಮೀ, ಚಳ್ಳಕೆರೆ 47 ಕಿ.ಮೀ ಹಾಗೂ ಹಿರಿಯೂರು 43 ಕಿ.ಮೀ ಸೇರಿದಂತೆ  ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 145 ಕಿ.ಮೀ ದೂರದವರೆಗೆ ಮಾನವ ಸರಪಳಿ ನಿರ್ಮಿಸಲಾಗುವುದು.  ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 170 ಕಿ.ಮೀ. ಉದ್ದದ ಮಾರ್ಗವಿದ್ದರೂ, ದಟ್ಟ ಅರಣ್ಯ ಪ್ರದೇಶದ ವ್ಯಾಪ್ತಿಯನ್ನು ಹೊರತುಪಡಿಸುವುದರಿಂದ, ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯದೇ 145 ಕಿ.ಮೀ. ಅತಿ ಉದ್ದನೆಯ ಮಾನವ ಸರಪಳಿ ನಿರ್ಮಾಣ ಆಗಲಿದೆ.  ಮಾನವ ಸರಪಳಿ ಮೊಳಕಾಲ್ಮುರು, ಚಳ್ಳಕೆರೆ ಮತ್ತು ಹಿರಿಯೂರು ಈ ಮೂರು ತಾಲ್ಲೂಕುಗಳಲ್ಲಿ ನಿರ್ಮಿಸಲಾಗುವುದು. ಉಳಿದ ಮೂರು ತಾಲ್ಲೂಕುಗಳಾದ ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕುಗಳ ಅಧಿಕಾರಿಗಳು, ನೌಕರರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಕೈಜೋಡಿಸಬೇಕು ಎಂದು ಹೇಳಿದರು.

ಪ್ರತಿ ಕಿ.ಮೀ. ಗೆ  850 ಜನರಿಂದ ಮಾನವ ಸರಪಳಿ:
ಪ್ರತಿ ಕಿ.ಮೀಗೆ ಅಂದಾಜು 850 ಜನರಂತೆ ಮಾನವ ಸರಪಳಿ ನಿರ್ಮಿಸಲಾಗುವುದು. ಒಟ್ಟು 145 ಕಿ.ಮೀ ಮಾನವ ಸರಪಳಿ ನಿರ್ಮಾಣಕ್ಕೆ ಅಂದಾಜು 1.20 ಲಕ್ಷ ಜನರು, ವಿದ್ಯಾರ್ಥಿಗಳು ಭಾಗವಹಿಸಬೇಕಾಗಿರುತ್ತದೆ. 35 ಸಾವಿರ ಪ್ರೌಢಶಾಲಾ ವಿದ್ಯಾರ್ಥಿಗಳು, 8 ಸಾವಿರ ಪದವಿಪೂರ್ವ ವಿದ್ಯಾರ್ಥಿಗಳು, 5 ಸಾವಿರ ಪದವಿ ಕಾಲೇಜಿನ ವಿದ್ಯಾರ್ಥಿಗಳು, 13 ಸಾವಿರ ಸ್ವ-ಸಹಾಯ ಸಂಘಗಳ ಸದಸ್ಯರು, 35 ಸಾವಿರ ಧರ್ಮಸ್ಥಳ ಸ್ವ-ಸಹಾಯ ಸಂಘಗಳ ಸದಸ್ಯರು, 800 ಆಶಾ ಕಾರ್ಯಕರ್ತರು, 1200 ಅಂಗನವಾಡಿ ಕಾರ್ಯಕರ್ತರು, 8 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಮಾನವ ಸರಪಳಿ ರಚಿಸುವ ಮಾರ್ಗದಲ್ಲಿನ ಅಕ್ಕಪಕ್ಕದ ಗ್ರಾಮ ಪಂಚಾಯಿತಿಗಳಿಂದ ಸುಮಾರು 25 ಸಾವಿರ ಜನರು ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ಸುಮಾರು 15 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. 

ಪ್ರತಿ 100 ಮೀಟರ್‍ಗೆ ಒಬ್ಬರಂತೆ ಒಟ್ಟು 1400 ಸಿಬ್ಬಂದಿ, ಪ್ರತಿ ಕಿ.ಮೀಟರ್‍ಗೆ ಒಬ್ಬರಂತೆ ಒಟ್ಟು 145 ನೋಡಲ್ ಅಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಹಾಗೂ ಪ್ರತಿ 5 ಕಿ.ಮೀಟರ್‍ಗೆ ಒಬ್ಬರಂತೆ 28 ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ರತಿ 20 ರಿಂದ 25 ಕಿ. ಮೀ. ಗೆ ಹಿರಿಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮೇಲ್ವಿಚಾರಣಾ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದ ಅವರು, ಅತೀ ಉದ್ದದ ಮಾನವ ಸರಪಳಿ ನಿರಂತರವಾಗಿ ರಚನೆ ಮಾಡುವ ನಿಟ್ಟಿನಲ್ಲಿ  ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

 

ಮಾನವ ಸರಪಳಿ ರಚನೆ ಕಾರ್ಯಕ್ರಮಕ್ಕೆ ಜಿಲ್ಲೆಯ ಖಾಸಗಿ ಹಾಗೂ ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳ ವಾಹನಗಳನ್ನು ಉಚಿತವಾಗಿ ನೀಡಲು ಮನವಿ ಮಾಡಲಾಗಿದ್ದು, ಜಿಲ್ಲೆಯಾದ್ಯಂತ 400 ಕ್ಕೂ ಹೆಚ್ಚು ವಾಹನಗಳ ವ್ಯವಸ್ಥೆ ಮಾಡಲಾಗಿದೆ. 20 ಖಾಸಗಿ ಬಸ್‍ನವರು ವಾಹನದ ವ್ಯವಸ್ಥೆ ಮಾಡಿಕೊಡಲಿದ್ದಾರೆ.  ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ತುರ್ತು ಆರೋಗ್ಯ ಅಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಂಚಾರ ಸುವ್ಯವಸ್ಥೆ ಹಾಗೂ ಸೂಕ್ತ ಬಂದೋಬಸ್ತ್‍ಗಾಗಿ ಪೊಲೀಸ್ ಇಲಾಖೆಯಿಂದ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಸೆ. 15 ರಂದು ಬೆಳಿಗ್ಗೆ ವೇದಿಕೆ ಕಾರ್ಯಕ್ರಮ ಹಿರಿಯೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯಲಿದೆ.  ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಗಣ್ಯಾತಿಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!