ಸಿರಿಗೆರೆಯಲ್ಲಿ ನವೆಂಬರ್ 8, 9 ಮತ್ತು 10 ರಂದು ತರಳಬಾಳು ನುಡಿಹಬ್ಬ

2 Min Read

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್,
ಚಿತ್ರದುರ್ಗ, ನವೆಂಬರ್. 05 : ಸಿರಿಗೆರೆಯಲ್ಲಿ ‘ತರಳಬಾಳು ನುಡಿಹಬ್ಬ’ದ ಮೂಲಕ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಪ್ರಚಾರ ಕಾರ್ಯದಲ್ಲಿ ಹೊಸ ಮೈಲಿಗಲ್ಲನ್ನು ರೂಪಿಸುತ್ತಿದೆ. 2024ರ ನವೆಂಬರ್ 8, 9 ಮತ್ತು 10ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ‘ತರಳಬಾಳು ನುಡಿಹಬ್ಬ 2024’ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ತರಳಬಾಳು ಜಗದ್ಗುರು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಜಿ.ಆರ್ ಓಂಕಾರಪ್ಪ ತಿಳಿಸಿದ್ದಾರೆ.

 

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶ್ರೀ ತರಳಬಾಳು ಜಗದ್ಗುರು ಬೃಹನ್ಮಠವು ಕಳೆದ ಆರೇಳು ದಶಕಗಳಿಂದ ಶಿಕ್ಷಣ, ಧರ್ಮ, ಕೃಷಿ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದಲ್ಲೂ ವಿಶಿಷ್ಟ ಕೊಡುಗೆ ನೀಡುತ್ತಿದೆ. ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು. ಶಿವಶರಣರ ಸಮಗ್ರ ವಚನ ಸಾಹಿತ್ಯಕ್ಕೂ ತಂತ್ರಾಂಶ ರೂಪಿಸಿ, ಜಗತ್ತಿನ ಜಿಜ್ಞಾಸುಗಳಿಗೆ ವಚನ ಸಾಹಿತ್ಯ ದೊರಕುವಂತೆ ಮಾಡಿದರು. 21ನೆಯ ಶತಮಾನದ ಈ ಕಾಲಘಟ್ಟದಲ್ಲಿ ತಂತ್ರಜ್ಞಾನ ಎಲ್ಲೆಡೆ ವ್ಯಾಪಿಸಿಕೊಂಡಿದೆ. ಅದಕ್ಕೆ ತಕ್ಕಂತೆ ಶಿವಶರಣರ 99 ಸಾವಿರ ವಚನಗಳನ್ನು ಮೊಬೈಲ್ ತಂತ್ರಾಂಶದಲ್ಲಿ ಕೈಗೆಟುಕುವಂತೆ ಮಾಡಿರುವುದು ಪೂಜ್ಯರ ಕರ್ತೃತ್ವ ಶಕ್ತಿಗೆ ಹಿಡಿದ ಕನ್ನಡಿಯಾಗಿದೆ ಎಂದರು.

 

ಪ್ರತಿವರ್ಷದಂತೆ ಈ ವರ್ಷವು ಸಿರಿಗೆರೆಯಲ್ಲಿ ‘ತರಳಬಾಳು ನುಡಿಹಬ್ಬ’ದ ಮೂಲಕ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಪ್ರಚಾರ ಕಾರ್ಯದಲ್ಲಿ ಹೊಸ ಮೈಲಿಗಲ್ಲನ್ನು ರೂಪಿಸುತ್ತಿದೆ. 2024ರ ನವೆಂಬರ್ 8,9 ಮತ್ತು 10ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ‘ತರಳಬಾಳು ನುಡಿಹಬ್ಬ- 2024’ ಹಮ್ಮಿಕೊಳ್ಳಲಾಗಿದೆ. ಈ ನುಡಿಹಬ್ಬದಲ್ಲಿ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಮೂರು ದಿನಗಳ ಕಾಲ ವಿಚಾರ ಗೋಷ್ಠಿ, ಕವಿಗೋಷ್ಠಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ, ನಾಟಕ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ. ಇದರಲ್ಲಿ ನಾಡಿನ ಹೆಸರಾಂತ ವಿದ್ವಾಂಸರು, ಕವಿಗಳು, ಕಲಾವಿದರು ಭಾಗವಹಿಸಲಿದ್ದಾರೆ.

ಕನ್ನಡ ಸಾಹಿತ್ ಪರಿಷತ್ ಅಧ್ಯಕ್ಷರಾದ ಶಿವಸ್ವಾಮಿ ಮಾತನಾಡಿ, ಸರ್ವಜ್ಞ ಕವಿಯ ತ್ರಿಪದಿಗಳು ಮತ್ತು ಡಿವಿಜಿಯವರ ‘ಮಂಕುತಿಮ್ಮನ ಕಗ್ಗ’ದ ಮೊಬೈಲ್ ತಂತ್ರಾಂಶ (ಆಫ್) ವನ್ನು ಈ ನುಡಿಹಬ್ಬದಲ್ಲಿ ಪ್ರಸಿದ್ಧ ಕವಿ ಡಾ. ಪ್ರದೀಪ್ ಕುಮಾರ್ ಹೆಬ್ರಿಯವರು ಲೋಕಾರ್ಪಣೆ ಮಾಡಲಿದ್ದಾರೆ. ಉದ್ಘಾಟನೆಯ ದಿನ ವಿವಿಧ ಜನಪದ ಕಲಾ ತಂಡಗಳೊಂದಿಗೆ ಮೆರವಣಿಗೆ, ಮಕ್ಕಳಿಂದ ಛದ್ಮವೇಶ, ನಾಲ್ಕು ಸಾವಿರ ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕನ್ನಡ ಪುಸ್ತಕಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡ ಸಾಹಿತಿಗಳ ಪುಸ್ತಕಗಳು, ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯದ ಪುಸ್ತಕಗಳ ದರ್ಶನ ಏರ್ಪಡಿಸಲಾಗಿದೆ.

2024ರ ಮಾರ್ಚ್ ತಿಂಗಳಿನಲ್ಲಿ ನಡೆದ ಪಿ ಯು ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪಿಯು ಕಾಲೇಜು ಕನ್ನಡ ಶಿಕ್ಷಕರು, ಉಪನ್ಯಾಸಕರುಗಳಿಗೆ ಶಿಕ್ಷಣ ಇಲಾಖೆಯಿಂದ ಅನ್ಯಕಾರ್ಯ ನಿಮಿತ್ತ (ಓಓಡಿ) ಸೌಲಭ್ಯ ಕಲ್ಪಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ದಾವಣಗೆರೆ ಮತ್ತು ಚಿತ್ರದುರ್ಗ ನಗರಗಳಿಂದ ಬಸ್ ಸೌಲಭ್ಯ ಒದಗಿಸಲಾಗುತ್ತದೆ. ಗೋಷ್ಟಿಯಲ್ಲಿ ಚಿತ್ರದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷರಾದ ಪ್ರಶಾಂತ್ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks