ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ : ಸಚಿವ ಡಾ.ಹೆಚ್.ಸಿ.ಮಹದೇವಪ್ಪ

suddionenews
2 Min Read

 

ಚಿತ್ರದುರ್ಗ. ನ.07: ಐಐಟಿ, ಐಐಎಂ, ಐಐಎಸ್‍ಸಿ, ಎನ್‍ಐಟಿಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳ  ಪ್ರೋತ್ಸಾಹ    ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.
ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ ಶೇ.60 ಕ್ಕೂ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ  ಪ್ರೋತ್ಸಾಹ   ಧನವನ್ನು ನೀಡಲಾಗುವುದು.

 

ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದೆ.

 

ಐಐಟಿ ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು ಎಂದು ಮಾನ್ಯ ಸಚಿವರು ತಿಳಿಸಿದರು.
ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ. ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟ್ಟುಕೊಂಡು ಮುಖ್ಯ ಘೋಷಣೆ ಮಾಡಿರುತ್ತದೆ. ಹೀಗಾಗಿ ಬಾಬಾ ಸಾಹೇಬರ ಆಶಯದಂತೆ ನಮ್ಮೆಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕೆಂದು ಸಚಿವರು ಆಶಯ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *