ಬೆಂಗಳೂರು: ಬೀದರ್ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಾ ಇದೆ. ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಈ ಕೇಸಿನ ಸಂಬಂಧ ಪತ್ರ ಬರೆದಿದ್ದಾರೆ. ಬಿಜೆಪಿಯವರು ರಾಜೀನಾಮೆಗೆ ಒತ್ತಾಯಿಸಿದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಈ ಪತ್ರ ಬರೆದಿದ್ದಾರೆ. ಈ ಪ್ರಕರಣವನ್ನು ಸಿಐಡಿಗೆ ವಹಿಸಿ ಎಂದು ಗೃಹ ಸಚಿವ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದಲ್ಲಿ ತಿಳಿಸಿದ್ದಾರೆ.
‘ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದು ಬಹಳ ದುಃಖಕರ ಸಂಗತಿ. ಈ ಪ್ರಕರಣದ ಬಗ್ಗೆ ಚರ್ಚೆ ಮೂಡೊಸುವಂತಹ ಹಲವು ವಿಚಾರಗಳು ಚರ್ಚೆಯಾಗುತ್ತಿವೆ. ಈ ಬಗ್ಗೆ ಸತ್ಯಾಂಶ ತಿಳಿಯಲು ಸಿಐಡಿಗೆ ವಹಿಸಲು ಈ ಮೂಲಕ ಕೋರಲಾಗಿದೆ. ಈ ಮೂಲಕ ಸತ್ಯಾಸತ್ಯತೆ ಹೊರಗೆ ಬರಬೇಕಿದೆ’ ಎಂದು ಪತ್ರ ಬರೆದಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಗುರಿಯಾಗಿಸಿರುವ ಬಿಜೆಪಿ ನಾಯಕರು ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ಇವರು ಯಾವ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ. ನನ್ನ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ. ಹಾಕಲು ಯಾರೂ ಬೇಡ ಎಂದರು. ನನ್ನ ರಾಜೀನಾಮೆ ಕೇಳುವವರು ಮೊದಲು ದಾಖಲೆ ತೋರಿಸಲಿ. ನನ್ನ ವಿರುದ್ಧ ಆರೋಪ ಮಾಡಿದಾಕ್ಷಣ ಅದು ನಿಜವಲ್ಲ. ಇಲ್ಲ ಸಲ್ಲದ ಆರೋಪ ಮಾಡಿ ನನ್ನ ರಾಜೀನಾಮೆ ಪಡೆದುಕೊಳ್ಳಬಹುದು ಎಂದುಕೊಂಡಿದ್ದಾರೆ. ಅದು ಸಾಧ್ಯವೆ ಇಲ್ಲ ಎಂದು ತಮ್ಮ ರಾಜೀನಾಮೆ ನೀಡುವ ಬಗ್ಗೆ ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದ್ದಾರೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂಬುದನ್ನು ಸಾರಿದ್ದಾರೆ.



















