Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಂಥಾಲಯ, ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಜಿ.ಪಂ ಸಿಇಒ ದಿಢೀರ್ ಭೇಟಿ, ಪರಿಶೀಲನೆ

---Advertisement---

 

ಚಿತ್ರದುರ್ಗ. ಫೆ.15: ಚಿತ್ರದುರ್ಗ ನಗರದ ಹೃದಯ ಭಾಗದಲ್ಲಿರುವ ನಗರ ಕೇಂದ್ರ ಗ್ರಂಥಾಲಯಕ್ಕೆ ಹಾಗೂ ನಗರದ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ದಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಗ್ರಂಥಾಲಯದಲ್ಲಿನ ವಾಚನಾಲಯ, ನಿಯತಕಾಲಿಕೆಗಳ ಕೊಠಡಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಓದುಗರು ಹಾಗೂ ಸ್ಪರ್ಧಾಕಾಂಕ್ಷಿಗಳೊಂದಿಗೆ ಮುಕ್ತವಾಗಿ ಮಾತನಾಡಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯ ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜೊತೆಗೆ, ಉನ್ನತ ಹುದ್ದೆ ಅಲಂಕರಿಸುವಂತಾಗಬೇಕು ಎಂದು ತಿಳಿಸಿ, ತಮ್ಮ ವಿದ್ಯಾರ್ಥಿ ಜೀವನದ ಅನುಭವ ಹಂಚಿಕೊಂಡರು.
ಕೆಎಂಇಆರ್‍ಸಿ ಅಡಿಯಲ್ಲಿ ಜಿಲ್ಲಾ ಮತ್ತು ನಗರ ಗ್ರಂಥಾಲಯಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಈ  ಅನುದಾನದಲ್ಲಿ ಅತೀ ಶೀಘ್ರದಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ನಗರ ಕೇಂದ್ರ ಮುಖ್ಯ ಗ್ರಂಥಾಧಿಕಾರಿ ಕೊಳ್ಳಿ ಬಸವರಾಜ್ ಮಾಹಿತಿ ನೀಡಿದರು.

ಗ್ರಂಥಾಲಯದ ಅವರಣದೊಳಗೆ ಕಾಮಗಾರಿಗಳ ಅನುಷ್ಟಾನ ಮಾಡುವ ಸ್ಥಳ ಪರಿಶೀಲಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಅವರು, ಬಿಡುಗಡೆಗೊಂಡಿರುವ ಅನುದಾನವನ್ನು ಕೆಎಂಇಆರ್‍ಸಿ ನಿಯಮಾನುಸಾರ ಖರ್ಚು ಮಾಡಿ, ಕಾಮಗಾರಿಗಳ ಗುಣಮಟ್ಟ  ಕಾಪಾಡಿಕೊಳ್ಳಬೇಕು ಮತ್ತು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಗ್ರಂಥಾಲಯಗಳನ್ನು ನಿರ್ಮಾಣ ಮಾಡಬೇಕೆಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿಗೆ ಸೂಚಿಸಿದರು. ನಂತರ ಶೌಚಾಲಯಕ್ಕೆ ಭೇಟಿ ನೀಡಿ, ವಿಶೇಷ ಚೇತನರು ಶೌಚಾಲಯ ಬಳಸಲು ಮತ್ತು ಹೋಗಿ ಬರಲು ಜಾಗವನ್ನು ಮಾಡಿಕೊಡಿ ಎಂದು ಸಲಹೆ ನೀಡಿದರು. ಅದೇ ರೀತಿಯಾಗಿ ಬ್ರೈಲ್ ಪುಸ್ತಕಗಳು ಮತ್ತು ಉಪಕರಣಗಳಗಳ ಬಗ್ಗೆ ಮಾಹಿತಿ ಪಡೆದರು.
ವಿದ್ಯಾರ್ಥಿ ನಿಲಯ ಪರಿಶೀಲನೆ: ಚಿತ್ರದುರ್ಗ ನಗರದ ಮೆದೇಹಳ್ಳಿ, ತಮಟಕಲ್ಲು ರಸ್ತೆಯಲ್ಲಿರುವ ಡಿ. ದೇವರಾಜು ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಜಿ.ಪಂ ಸಿಇಒ ಭೇಟಿ ನೀಡಿ ಪರಿಶೀಲಿಸಿದರು.

ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ನಿಲಯ ಪಾಲಕರೊಂದಿಗೆ ಕುಂದು ಕೊರತೆ ಆಲಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ನಿಲಯಕ್ಕೆ ಉತ್ತಮವಾದ ಗ್ರಂಥಾಲಯಬೇಕೆಂದು ಮನವಿ ಮಾಡಿಕೊಂಡರು. ಅಲ್ಲೇ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಭೋಜನ ಸವಿದರು.
ನಂತರ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಮಾಹಿತಿ ಪಡೆದರು. ಅಲ್ಲಿನ ಹಾಸ್ಟೆಲ್ ವಾರ್ಡನ್ ಮತ್ತು ವಿದ್ಯಾರ್ಥಿನಿಯರೊಂದಿಗೆ ಕುಂದು- ಕೊರತೆಗಳ ಮಾಹಿತಿ ಪಡೆದರು.

 

ಈ  ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುಬ್ರನಾಯಕ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ಕೊಳ್ಳಿ ಬಸವರಾಜ್ ಸೇರಿದಂತೆ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಹಾಗೂ ನಿಲಯ ಪಾಲಕರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment