ಬಳ್ಳಾರಿ; ಜಿಲ್ಲೆಯಲ್ಲಿ ಸುಮಾರು 100 ಕೋಟಿ ವೆಚ್ಚದಲ್ಲಿ ಮೆಗಾ ಡೈರಿ ಸ್ಥಾಪನೆ ಮಾಡಲಾಗುವುದು ಎಂದು ಅಂದಿನ ಸಿಎಂ ಆಗಿದ್ದ ಬಸವರಾಜ್ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು. ಇಂದಿನ ಸರ್ಕಾರದಲ್ಲೂ ಅದಕ್ಕೆ ಒಪ್ಪಿಗೆ ಸಿಕ್ಕಿದೆ. ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ. ಆದರೆ ಇದರ ನಡುವೆ ರೈತರು ಹಾಗೂ ಕೆಎಂಎಫ್ ಅಧ್ಯಕ್ಷರ ನಡುವೆ ಜಟಾಪಟಿ ಆರಂಭವಾಗಿದೆ. ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಉತ್ಪಾ್ಕರ ಸಂಘವೂ ರಾಜ್ಯದಲ್ಲಿ ಲಾಭದಲ್ಲಿರುವ ಹಾಲು ಒಕ್ಕೂಟಗಳಲ್ಲಿ ಒಂದಾಗಿದೆ.

ಹೀಗಾಗಿ ಕಲ್ಯಾಣ ಕರ್ನಾಟಕದಲ್ಲಿ ಹಾಲು ಉತ್ಪಾದನೆಯನ್ನು ಹೆಚ್ಚಿಸಲು, ಬಳ್ಳಾರಿ ಜಿಲ್ಲೆಯಲ್ಲಿ ಪ್ರತಿದಿನ ಎರಡು ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯದ ಮೆಗಾ ಡೈರಿಯನ್ನು ಸ್ಥಾಪಿಸಲು ಸರ್ಕಾರ ಒಪ್ಪಿಗೆ ಕೊಟ್ಟಿದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ವಿಭಜನೆಯಾದ ಬಳಿಕ ಮೆಗಾ ಡೈರಿ ಸ್ಥಾಪನೆ ವಿಚಾರದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಹಾಗೂ ರೈತರ ನಡುವೆ ಜಟಾಪಟಿ ನಡೆಯುತ್ತಿದೆ.

ಬಳ್ಳಾರಿಗೆ ಮಂಜೂರಾಗಿದ್ದ ಡೈರಿಯನ್ನು ಕೆಎಂಎಫ್ ಅಧ್ಯಕ್ಷರು ವಿಜಯನಗರಕ್ಕೆ ಸ್ಥಳಾಂತರ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ರೈತರು ಮಾಡಿದ್ದಾರೆ. ವಿಜಯನಗರ ಜಿಲ್ಲೆ ಕೇಂದ್ರ ಹೊಸಪೇಟೆಯಲ್ಲಿ ಸ್ಥಾಪನೆ ಮಾಡಲು ಮುಂದಾಗಿದ್ದಾರೆ ಎಂಬ ಆರೋಪವಿದೆ. ಬಳ್ಳಾರಿಯಲ್ಲಿ ಮೆಗಾ ಡೈರಿ ಸ್ಥಾಪನೆ ಮಾಡಲು ಎರಡು ಸ್ಥಳಗಳನ್ನು ಜಿಲ್ಲಾಡಳಿತ ಗುರುತು ಮಾಡಿದೆ. ಆದರೆ ಮೆಗಾ ಡೈರಿ ಸ್ಥಳಾಂತರಗೊಂಡಿದ್ದರ ಸುದ್ದಿ ಕೇಳಿ ರೈತರು ಆಕ್ರೋಶಗೊಂಡಿದ್ದಾರೆ. ಒಂದು ವೇಳೆ ಬಳ್ಳಾರಿಯಲ್ಲಿ ಡೈರಿ ಸ್ಥಾಪನೆಯಾಗದೆಹೋದರೆ ಹೋರಾಟ ಮಾಡುತ್ತೇವೆ ಎಂದು ರೈತರು ಎಚ್ಚರಿಕೆಯನ್ನು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಡೈರಿ ಬೇರೆಡೆಗೆ ಶಿಫ್ಟ್ ಆಗಬಾರದು ಎಂದು ರೈತರು ಆಗ್ರಹಿಸಿದ್ದಾರೆ.

