ಬೆಂಗಳೂರು; ರಾಜ್ಯದಲ್ಲಿ ಸಾಜಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಇದರ ವಿರುದ್ಧ ಬಿಜೆಪಿ ನಾಯಕರು ಹೋರಾಟದ ಕಹಳೆ ಊದಿದ್ದಾರೆ. ಬೆಲೆ ಏರಿಕೆ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯಾದ್ಯಂತ ಹೋರಾಟ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ಏಪ್ರಿಲ್ 2ರಿಂದ ಹೋರಾಟ ಮಾಡುತ್ತೇವೆಂದಿರುವ ವಿಜಯೇಂದ್ರ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು ಮತ್ತು ಜಿಲ್ಲಾ ಘಟಕದ ಅಭ್ಯರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತೇವೆ. ನಾಲ್ಕು ಹಂತಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಹೋರಾಟ ನಡೆಸುತ್ತೇವೆ. ಏಪ್ರಿಲ್ 7ರಂದು ಮೈಸೂರಿನಿಂದ ಜನಜಾಗೃತೊ ಹೋರಾಟ ಪ್ರಾರಂಭವಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಜನಾಕ್ರೋಶ ಹೋರಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಲಿದ್ದಾರೆ. ಏ.7ರಂದು ಮೈಸೂರು, ಚಾಮರಾಜನಗರದಲ್ಲಿ ಜನಜಾಗೃತಿ ಹೋರಾಟ ನಡೆಯಲಿದ್ದು, ಏಪ್ರಿಲ್ 8ರಂದು ಮಂಡ್ಯ, ಹಾಸನದಲ್ಲಿ ನಡೆಯಲಿದೆ. ಏಪ್ರಿಲ್ 9ರಂದು ಕೊಡಗು, ಮಂಗಳೂರಿನಲ್ಲಿ ಜನಾಕ್ರೋಶ ಹೋರಾಟ ನಡೆಯಲಿದೆ. ಏಪ್ರಿಲ್ 10ರಂದು ಉಡುಪಿ, ಚಿಕ್ಕಮಗಳೂರಿನಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲದರ ದರವನ್ನು ಏರಿಕೆ ಮಾಡುತ್ತಿದೆ. ದುಬಾರಿ ಜೀವನವನ್ನು ನಡೆಸುವಂತೆ ಮಾಡಿದೆ. ದೇಶದಲ್ಲಿಯೇ ಅತ್ಯಂತ ದುಬಾರಿ ಜೀವನ ನಡೆಸುವ ದುಸ್ಥಿತಿ ತಂದಿದೆ. ಗಾಳಿ ಹೊರತುಪಡಿಸಿದರೆ ಉಳಿದೆಲ್ಲದರ ದರವನ್ನು ಏರಿಕೆ ಮಾಡಿಕೊಂಡು ಬರುತ್ತಿದೆ. ಮತದಾರರಿಗೆ ವರದಾನವಾಗುವ ಬದಲು ಸರ್ಕಾರ ಶಾಪಗ್ರಸ್ಥವಾಗಿದೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಹೆಚ್ಚಳವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.


