ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 08 : ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಮೇ.5 ರಿಂದ ಆರಂಭಿಸಿರುವ ಮನೆ ಮನೆ ಸಮೀಕ್ಷೆಯಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್ ಪಾಲ್ಗೊಂಡು ಕಡ್ಡಾಯವಾಗಿ ಮಾದಿಗ ಎಂದು ಬರೆಸುವಂತೆ ಜಾಗೃತಿ ಮೂಡಿಸಿದರು.
ನಗರದ ಕೆಳಗೋಟೆಯ ಅಂಬೇಡ್ಕರ್ ಬಡಾವಣೆಯಲ್ಲಿ ಗುರುವಾರ ನಡೆದ ಮನೆ ಮನೆ ಗಣತಿಯಲ್ಲಿ ಭಾಗವಹಿಸಿದ್ದ ಜಿ.ಎಸ್.ಮಂಜುನಾಥ್ ಮಾದಿಗ ಜನಾಂಗ ಯಾವುದೇ ಕಾರಣಕ್ಕೂ ಆದಿ ಕರ್ನಾಟಕ, ಆದಿ ದ್ರಾವಿಡ ಎಂದು ನಮೂದಿಸಬಾರದು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿರುವ ಈ ಸಮಾಜ ಜಾತಿ ಗಣತಿಯಲ್ಲಿ ಮಾದಿಗ ಎಂದು ನಮೂದಿಸದಿದ್ದರೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪರಿಶಿಷ್ಟ ಜಾತಿಯಲ್ಲಿನ ಒಳ ಜಾತಿಗಳಿಗೆ ಆಯಾ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ಕಲ್ಪಿಸಲು ನೆರವಾಗಲಿದೆ ಎಂದರು.
ಒಳ ಮೀಸಲಾತಿಯನ್ನು ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ಮಹತ್ತರ ತೀರ್ಪಿನಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ವರ್ಗಿಕರಣಕ್ಕೆ ಮುಂದಾಗಿದ್ದು, ಮೇ 17 ರವರೆಗೆ ಜಾತಿ ಸಮೀಕ್ಷೆ ನಡೆಯಲಿದೆ. ಗಣತಿದಾರರು ಮನೆ ಮನೆಗೆ ಭೇಟಿ ನೀಡಿದಾಗ ನಿಖರವಾದ ಮಾಹಿತಿ ನೀಡಿ ಮಾದಿಗ ಎಂದು ಬರೆಸಿ ಶೈಕ್ಷಣಿಕ ಮತ್ತು ಉದ್ಯೋಗಕ್ಕೆ ಅವಕಾಶ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದರು.






