ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ಜಾತಿ, ಧರ್ಮಕ್ಕಿಂತ ಮಾನವೀಯತೆ ಮುಖ್ಯ. ಜಾತ್ಯಾತೀತ ದೇಶದ ಭಾರತದಲ್ಲಿರುವ ಎಲ್ಲಾ ಧರ್ಮಿಯರು ಅನ್ಯೋನ್ಯತೆಯಿಂದ ಬದುಕುತ್ತಿದ್ದಾರೆಂದು ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್ವುಲ್ಲಾ ತಿಳಿಸಿದರು.
ಹಿಂದೂ-ಮುಸ್ಲಿಂ-ಕ್ರೈಸ್ತರು, ಧರ್ಮ ಯಾವುದಾದರೇನು? ನಾವು ಮೊದಲು ಭಾರತೀಯರು ಎನ್ನುವ ವಿಚಾರ ಕುರಿತು ಪ್ರವಾಸಿ ಮಂದಿರದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಎಲ್ಲಾ ಜಾತಿ ಧರ್ಮದವರಿಗೂ ಸಮಾನತೆ ನೀಡಿದ್ದಾರೆ. ಮುಸ್ಲಿಂರಿಗೆ ಕುರಾನ್, ಹಿಂದೂಗಳಿಗೆ ಭಗವದ್ಗೀತೆ, ಕ್ರೈಸ್ತರಿಗೆ ಬೈಬಲ್ ಇದೆ. ಇವೆಲ್ಲವುಗಳಿಗಿಂತಲೂ ಸಂವಿಧಾನ ದೊಡ್ಡ ಗ್ರಂಥ. ಮತದಾರರು ಚುನಾವಣೆಯಲ್ಲಿ ಮತಗಳನ್ನು ಮಾರಿಕೊಳ್ಳದೆ. ಯೋಗ್ಯರನ್ನು ಆಯ್ಕೆ ಮಾಡಿದಾಗ ಸದೃಢ ದೇಶ ಕಟ್ಟಲು ಸಾಧ್ಯ. ಸಂವಿಧಾನವನ್ನು ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.
ಫಾದರ್ ಎಂ.ಎಸ್.ರಾಜು ಮಾತನಾಡಿ ಬಹುಸಂಖ್ಯಾತರಿಂದ ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ, ದಬ್ಬಾಳಿಕೆ, ಶೋಷಣೆ ನಡೆಯುತ್ತಿದೆ. ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗೆ ಅನೇಕರು ಬಲಿಯಾಗಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು, ಅಲ್ಪಸಂಖ್ಯಾತರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಹೋರಾಟ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲಾ ಗ್ರಂಥಗಳಿಗಿಂತಲೂ ಸಂವಿಧಾನ ಶ್ರೇಷ್ಟವಾದುದು. ಹಾಗಾಗಿ ಪ್ರತಿಯೊಬ್ಬರು ಸಂವಿಧಾನವನ್ನು ಓದಬೇಕೆಂದು ಮನವಿ ಮಾಡಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹಿರಿಯರು ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಅಂತಹ ಸ್ವಾತಂತ್ರ್ಯವನ್ನು ಅನುಭವಿಸಲು ಆಗುತ್ತಿಲ್ಲ. ಕೋಮುವಾದಿಗಳು ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ. ದೇಶದ ಬಹುತ್ವ ನಾಶಪಡಿಸಲು ಸಂಚು ರೂಪಿಸುತ್ತಿರುವವರ ವಿರುದ್ದ ಜಾಗೃತರಾಗಿರಬೇಕೆಂದು ಹೇಳಿದರು.
ಲೇಖಕ ಹೆಚ್.ಆನಂದ್ಕುಮಾರ್ ಮಾತನಾಡುತ್ತ ಭಾರತೀಯತೆ ಎನ್ನುವುದು ಬಹುತ್ವದ ಅಡಿಪಾಯವಿದ್ದಂತೆ. ಯಾವುದೇ ಒಂದು ದೇಶಕ್ಕೆ ಮೂಲಭೂತವಾದ ಎನ್ನುವುದು ಶಾಪ. ಅತಿಯಾದ ಆಸ್ತಿಕವಾದ ಅವನತಿಯ ಸಂಕೇತ. ಸ್ವಾತಂತ್ರ್ಯ ಪೂರ್ವದ ಭಾರತವೆ ಬೇರೆ, ಈಗಿನ ಭಾರತವೆ ಬೇರೆ. ದೇಶದಲ್ಲಿ ಸಮಾಜವಾದವನ್ನು ಮತ್ತೆ ಮತ್ತೆ ಬಿತ್ತುವ ಕೆಲಸವಾಗಬೇಕೆಂದರು.
ವಿಚಾರ ಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಎ.ಸಾಧಿಕ್ವುಲ್ಲಾ ಮಾತನಾಡಿ ಎಲ್ಲಾ ಜಾತಿ ಧರ್ಮಕ್ಕಿಂತ ಭಾರತೀಯತೆ ಎನ್ನುವುದು ಮುಖ್ಯ. ಸಂವಿಧಾನ ಎಲ್ಲಾ ಗ್ರಂಥಗಳಿಗಿಂತಲೂ ಶ್ರೇಷ್ಟವಾದುದು. ರಾಜಕೀಯ ಲಾಭಕ್ಕಾಗಿ ಕೆಲವರು ದೇಶದ ಐಕ್ಯತೆಯನ್ನು ಹಾಳು ಮಾಡಿ ಜಾತಿ ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶವಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹಿರಿಯರ ತ್ಯಾಗ, ಬಲಿದಾನವಿದೆ. ಅಪಾಯದಲ್ಲಿರುವ ಸಂವಿಧಾನವನ್ನು ಉಳಿಸಿಕೊಳ್ಳುವಲ್ಲಿ ಹೋರಾಡಬೇಕಿದೆ ಎಂದು ತಿಳಿಸಿದರು.
ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ನ್ಯಾಯವಾದಿ ದಿಲ್ಶಾದ್ ಉನ್ನಿಸಾ, ಪ್ರಸಾರ ಭಾರತಿ ಆಕಾಶವಾಣಿಯ ಡಾ.ನವೀನ್ ಮಸ್ಕಲ್, ಕರ್ನಾಟಕ ಬಂಜಾರ ಸೇವಾ ಸಂಘದ ಜಿಲ್ಲಾಧ್ಯಕ್ಷ ಆರ್.ಗಿರೀಶ್ನಾಯ್ಕ ಇನ್ನು ಮುಂತಾದವರು ವಿಚಾರ ಗೋಷ್ಟಿಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













