ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 16 : ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ತಕ್ಷಣವೇ ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.
ಹಿರಿಯೂರು ತಾಲ್ಲೂಕಿನ ತಾಳವಟ್ಟಿ ಗ್ರಾಮದಲ್ಲಿ ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ನೂತನ ಶಾಲಾ ಕೊಠಡಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 17 ಸಾವಿರ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಅನುಮೋದನೆ ನೀಡಿದ್ದು, ಈ ಬಾರಿಯ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳದೇ ಕೇವಲ 3 ರಿಂದ 4 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ನಡೆಸಿ, ಶಾಲೆಗಳಿಗೆ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು ಎಂದು ಹೇಳಿದರು.
ರಾಜ್ಯ ಶಿಕ್ಷಣ ನೀತಿ (ಎಸ್ಇಪಿ) ಕರಡು ವರದಿ ಸಲ್ಲಿಸಲಾಗಿದ್ದು, ಅದರಲ್ಲಿರುವ ನ್ಯೂನತೆಗಳನ್ನು ಪರಿಶೀಲನೆ ನಡೆಸಲು ಉಪ ಸಮಿತಿ ರಚನೆ ಮಾಡಿ, ನಂತರ ಅಂತಿಮವಾಗಿ ಅನುಷ್ಠಾನ ಮಾಡಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಒಪ್ಪುವುದಿಲ್ಲ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಪ್ರಸ್ತುತ 307 ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್) ಕಾರ್ಯನಿರ್ವಹಿಸುತ್ತಿದ್ದು, ಈ ವರ್ಷವೇ ರಾಜ್ಯ ಸರ್ಕಾರ ವತಿಯಿಂದ 500 ಕೆಪಿಎಸ್ ಶಾಲೆಗಳನ್ನು 15 ದಿನದೊಳಗಾಗಿ ಘೋಷಣೆ ಮಾಡಲಾಗುವುದು. ಇದರ ಜೊತೆಗೆ ಹೈದರಬಾದ್ ಕರ್ನಾಟಕದಲ್ಲಿ ಅಕ್ಷರ ಅವಿಷ್ಕಾರ ವತಿಯಿಂದ 100 ಕೆಪಿಎಸ್ ಶಾಲೆಗಳು ಸೇರಿದಂತೆ ಒಟ್ಟು 600 ಕೆಪಿಎಸ್ ಶಾಲೆಗಳು ಕಾರ್ಯಾರಂಭ ಮಾಡಲಿದೆ. ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳು ಉತ್ತಮ ವಾತಾವರಣದಲ್ಲಿ ವ್ಯಾಸಂಗ ಮಾಡಬಹುದಾಗಿದ್ದು, ಖಾಸಗಿ ಶಾಲೆಗಳಿಗಿಂತ ಉತ್ತಮವಾದ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯಲಿದೆ ಎಂದು ಹೇಳಿದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ತಡೆಗಟ್ಟುವ ನಿಟ್ಟಿನಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು, ಮಕ್ಕಳು ಸ್ವಂತ ಶಕ್ತಿ, ಸಾಮಾಥ್ರ್ಯದ ಮೇಲೆ ಉತ್ತೀರ್ಣರಾಗುವ ವ್ಯವಸ್ಥೆಗಾಗಿ ಪರೀಕ್ಷೆ-1, ಪರೀಕ್ಷೆ-2, ಪರೀಕ್ಷೆ-3 ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

