ಚಿತ್ರದುರ್ಗ. ಸೆ.16: ಗರ್ಭಿಣಿ, ಬಾಣಂತಿಯರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಸೂಚನೆ ಮೇರೆಗೆ ಉತ್ತಮ ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ರಶ್ಮಿ ಎಸ್ ಮರಡಿ ತಿಳಿಸಿದರು.
ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪೋಷಣ್ ಮಾಹೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಮಹೇಶ್ವರಪ್ಪ ಮಾತನಾಡಿ, ಮಹಿಳೆಯರು ಮತ್ತು ಗರ್ಭಿಣಿ, ಬಾಣಂತಿಯರು ಹೆಚ್ಚು ಹೆಚ್ಚು ಹಸಿ ತರಕಾರಿ, ಸೊಪ್ಪುಗಳು ಹಾಗೂ ಹಣ್ಣುಗಳನ್ನು ಬಳಸುವುದರಿಂದ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಅಭಿನವ್ ಮಾತನಾಡಿ, ಸಮತೋಲನ ಆಹಾರ ಸೇವಿಸುವುದರಿಂದ ಆಹಾರದ ಕೊರತೆಯಿಂದ ಕಂಡುಬರುವ ರಕ್ತ ಹೀನತೆ ಬಗ್ಗೆ ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಇಂತಹ ಕಾರ್ಯಕ್ರಮಗಳು ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದಲ್ಲಿ ಹೆಚ್ಚು ಪ್ರಚಾರ ಮಾಡಬಹುದು ಎಂದು ತಿಳಿಸಿದರು.
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಪ್ರಕಾಶ್, ಜಿಲ್ಲಾ ನಿರೂಪಣಾಧಿಕಾರಿ ಡಿ.ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮ್ ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮಂಜುಳಾ, ಅನುರಾಧ, ಅಂಗನವಾಡಿ ಕಾರ್ಯಕರ್ತರು ಇದ್ದರು.



