ಸುದ್ದಿಒನ್,ಧಾರವಾಡ,ಮೇ.11: ಪ್ರೀತಿಸಿದ ಯುವಕನೊಂದಿಗೆ ಮದುವೆ ಮಾಡಲು ಪೋಷಕರು ಒಪ್ಪದ ಹಿನ್ನೆಲೆಯಲ್ಲಿ, ಮನನೊಂದ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದಿದೆ.
ಯರಗುಪ್ಪಿ ಗ್ರಾಮದ ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಕಳೆದ ಕೆಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎಂಬ ಯುವಕನನ್ನು ಗಾಢವಾಗಿ ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ತನ್ನ ಪ್ರೇಮ ವಿಷಯವನ್ನು ಪೋಷಕರಿಗೆ ತಿಳಿಸಿದ್ದ ಶ್ವೇತಾ, ತಾನು ನಾಗರಾಜ್ನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ, ಆಕೆಯ ಪ್ರೇಮ ಸಂಬಂಧಕ್ಕೆ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಪ್ರೀತಿಸಿದವನೊಂದಿಗೆ ಜೀವನ ನಡೆಸುವ ಕನಸು ಕಂಡಿದ್ದ ಯುವತಿಗೆ ಪೋಷಕರ ನಿರ್ಧಾರ ಆಘಾತ ತಂದಿತ್ತು.

ಪೋಷಕರ ವಿರೋಧದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಶ್ವೇತಾ, ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ಮಾಡಲಾಯಿತಾದರೂ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










