ಸುದ್ದಿಒನ್, ಚಿತ್ರದುರ್ಗ, ಜನವರಿ. 13 :ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ನೀಡುವಂತಹ “ಕರ್ನಾಟಕ ಆರೊಗ್ಯ ಸಂಜೀವಿನಿ” ಯೋಜನೆಯ ಬಗ್ಗೆ ಅಸಹಕಾರ ತೋರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ನೌಕರರ ಸಂಘದ ಅಧ್ಯಕ್ಷ ಮಾಲತೇಶ್ ಮುದ್ದಜ್ಜಿ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರ
ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಯೋಜನೆಯನ್ನು ಈಗಾಗಲೆ ಜಾರಿಗೊಳಿಸಲಾಗಿದ್ದು, ಯೋಜನೆಯಡಿ ಈಗಾಗಲೆ ನೋಂದಾಯಿತವಾಗಿರುವ ಖಾಸಗಿ ಆಸ್ಪತ್ರೆಗಳು ಸಿಜಿಹೆಚ್ಎಸ್ ಚಿಕಿತ್ಸಾ ದರ ಕಡಿಮೆ ಇದೆ ಎಂಬ ಸಬೂಬು ಹೇಳಿ, ಚಿಕಿತ್ಸೆ ನೀಡಲು ನಿರಾಕರಿಸುತ್ತಿದ್ದಾರೆ, ಅಲ್ಲದೆ ಯೋಜನೆಗೆ ಅಸಹಕಾರ ತೋರುತ್ತಿದ್ದಾರೆ. ನೌಕರರು ಪ್ರತಿ ತಿಂಗಳು ಈ ಯೋಜನೆಗೆ ವಂತಿಗೆಯನ್ನು ಪಾವತಿಸುತ್ತಿದ್ದಾರೆ, ಆದರೆ ನೋಂದಾಯಿತ ಆಸ್ಪತ್ರೆಗಳಿಂದ ನೌಕರರಿಗೆ ನಿರೀಕ್ಷಿತ ಮಟ್ಟದಲ್ಲಿ ಸಹಕಾರ ಸಿಗುತ್ತಿಲ್ಲ. ಈ ಕುರಿತಂತೆ ಸಂಬಂಧಿಸಿದ ಖಾಸಗಿ ಆಸ್ಪತ್ರೆಗಳಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಅವರು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿಗಳು, ಈ ಯೋಜನೆ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕುಷ್ಟರೋಗ ನಿವಾರಣಾ ಅಧಿಕಾರಿಗಳನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಅಧಿಕಾರಿಗಳು ನೌಕರರಿಗೆ ಸಹಾಯವಾಣಿ ಹಾಗೂ, ನಿರ್ದಿಷ್ಟ ದೂರುಗಳಿದ್ದಲ್ಲಿ ಸ್ವೀಕರಿಸಿ, ಪರಿಹರಿಸುವ ಕಾರ್ಯ ಮಾಡಬೇಕು. ಈ ಕುರಿತಂತೆ ಸೂಚನೆ ನೀಡಲಾಗುವುದು ಹಾಗೂ ಅಸಹಕಾರ ತೋರುವ ಆಸ್ಪತ್ರೆಗಳ ವಿರುದ್ಧ ನಿರ್ದಿಷ್ಟ ಪ್ರಕರಣಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಆಸ್ಪತ್ರೆಗಳಿಗೆ ಸೂಚನೆ ನೀಡಬೇಕು ಎಂದು ತಾಕೀತು ಮಾಡಿದರು.



