ಬೆಂಗಳೂರು : ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಪ್ರತಿಭಾನ್ವಿತ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳು ಮತ್ತು ಚಿತ್ರರಂಗದಲ್ಲಿ ಶೋಕ ಮೂಡಿಸಿದೆ. ಇಂದು ಮುಂಜಾನೆ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.ಕನ್ನಡ ಸಿನಿಮಾಗಳು ಮತ್ತು ಧಾರಾವಾಹಿಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದ ದಿಲೀಪ್ ರಾಜ್, ಇತ್ತೀಚಿನ ವರ್ಷಗಳಲ್ಲಿ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು.
ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ನಿರ್ಮಾಣದಲ್ಲಿ ಅವರು ತೊಡಗಿಸಿಕೊಂಡಿದ್ದರು.ದಿಲೀಪ್ ರಾಜ್ ಅವರ ಪತ್ನಿ ಶ್ರೀವಿದ್ಯಾ ಅವರೊಂದಿಗೆ ‘ಡಿ2ಆರ್ ಮೀಡಿಯಾ ಪ್ರೊಡಕ್ಷನ್ಸ್’ ಸಂಸ್ಥೆ ನಡೆಸುತ್ತಿದ್ದರು. ಈ ಬ್ಯಾನರ್ ಅಡಿಯಲ್ಲಿ ‘ಹಿಟ್ಲರ್ ಕಲ್ಯಾಣ’, ‘ಕೃಷ್ಣ ರುಕ್ಕು’ ಸೇರಿದಂತೆ ಹಲವು ಧಾರಾವಾಹಿಗಳನ್ನು ನಿರ್ಮಿಸಿದ್ದರು.
47 ವರ್ಷದ ದಿಲೀಪ್ ರಾಜ್ ಕೊನೆಯದಾಗಿ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ನಟಿಸಿದ್ದರು. ಮನೆಯಲ್ಲಿ ಹಠಾತ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು ಎಂದು ಹೇಳಲಾಗುತ್ತಿದೆ.ಕಿರುತೆರೆಯ ‘ಕಂಬದ ಮನೆ’, ‘ಜನನಿ’, ‘ರಥಸಪ್ತಮಿ’ ಸೇರಿದಂತೆ ಹಲವು ಧಾರಾವಾಹಿಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಅವರು, 2005ರಲ್ಲಿ ಬಿಡುಗಡೆಯಾದ ‘ಭಾಯ್ ಫ್ರೆಂಡ್’ ಚಿತ್ರದ ಮೂಲಕ ಸಿನಿರಂಗ ಪ್ರವೇಶಿಸಿದ್ದರು. ಬಳಿಕ 2007ರ ‘ಮಿಲನ’ ಸಿನಿಮಾದ ಖಳನಾಯಕ ಪಾತ್ರದ ಮೂಲಕ ಹೆಚ್ಚು ಗಮನ ಸೆಳೆದಿದ್ದರು.

‘7 ಓ ಕ್ಲಾಕ್’, ‘ಕ್ಷಣ ಕ್ಷಣ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿ ತಮ್ಮದೇ ಛಾಪು ಮೂಡಿಸಿದ್ದರು. ಇತ್ತೀಚಿನ ದಿನಗಳಲ್ಲಿ ಕಿರುತೆರೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದ ಅವರು, ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಎ.ಜೆ ಪಾತ್ರದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಆ ಪಾತ್ರಕ್ಕೆ ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.






