ಬೆಂಗಳೂರು.ಜುಲೈ.19: ರಾಜ್ಯದಲ್ಲಿ ತಲೆದೂರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಮಳೆ ಕೊರತೆಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗ್ರಾಮೀಣ ತಾಲ್ಲೂಕುಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ತಲಾ 1 ಕೋಟಿ ರೂಪಾಯಿ ಹೆಚ್ಚುವರಿ ಅನುದಾನವನ್ನು ಘೋಷಿಸಿದ್ದಾರೆ.
ಬರ ಪರಿಹಾರದ ಹೆಸರಿನಲ್ಲಿ ನಡೆಯುವ ಅಕ್ರಮಗಳಿಗೆ ಕಡಿವಾಣ ಹಾಕಲು ಮುಖ್ಯಮಂತ್ರಿಗಳು ಕಡಕ್ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ಹೊಸ ಬೋರ್ವೆಲ್ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಮಾಡಬೇಕಾಗಿದ್ದು, ನಕಲಿ ಪ್ರಕರಣಗಳು ಪತ್ತೆಯಾದರೆ ಆಯಾ ಜಿಲ್ಲೆಯ ಸಿಇಒಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ. ಅಧಿಕಾರಿಗಳು ಕೇವಲ ಕಚೇರಿಯಲ್ಲಿ ಕುಳಿತು ಕಾಗದದ ವರದಿ ನೀಡದೆ, ‘ಟೀಮ್ ಕರ್ನಾಟಕ’ ಮನಸ್ಥಿತಿಯೊಂದಿಗೆ ಫೀಲ್ಡ್ಗೆ ಇಳಿದು ಕೆಲಸ ಮಾಡಬೇಕು. ಕೃಷಿ, ಪಶುಸಂಗೋಪನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಆದೇಶಿಸಿದ್ದಾರೆ. ಅಲ್ಲದೆ, ವಿದ್ಯುತ್ ವ್ಯತ್ಯಯ ತಡೆಗಟ್ಟಲು ಮತ್ತು ಟ್ರಾನ್ಸ್ಫಾರ್ಮರ್ಗಳ ತುರ್ತು ರಿಪೇರಿಗಾಗಿ 4G ವಿನಾಯಿತಿ ನೀಡಿ, ಹೆಚ್ಚುವರಿ ಟ್ರಾನ್ಸ್ಫಾರ್ಮರ್ಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ವರದಿಯನ್ನು ಸಲ್ಲಿಸಿ, ಕೇಂದ್ರ ತಂಡಕ್ಕೆ ವಾಸ್ತವಾಂಶ ಮನವರಿಕೆ ಮಾಡಿಕೊಡಲು ಸಿದ್ಧತೆ ನಡೆಸಲಾಗಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ವಿಡಿಯೋ ಸಂವಾದ ನಡೆಸಿ, ನೀಡಿದ ಪ್ರಮುಖ ಮಾರ್ಗದರ್ಶನಗಳು ಹಾಗೂ ಪ್ರಸ್ತುತ ರಾಜ್ಯದ ಬರ ಪರಿಸ್ಥಿತಿಯ ವಿವರಗಳು ಇಂತಿವೆ:
• ₹1 ಕೋಟಿ ಹೆಚ್ಚುವರಿ ಅನುದಾನ: ಗ್ರಾಮೀಣ… pic.twitter.com/wAezyHktUJ
— CM of Karnataka (@CMofKarnataka) July 19, 2026
ರಾಜ್ಯದಲ್ಲಿ ಆತಂಕ ತಂದಿಟ್ಟ ಮಳೆ ಹಾಗೂ ಜಲಮಟ್ಟದ ಕೊರತೆ
ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಒಟ್ಟಾರೆ ಶೇ. 39 ರಷ್ಟು ಕೊರತೆಯಾಗಿದೆ. ರಾಜ್ಯದ 170 ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಅಭಾವವಿದ್ದು, ವಿಜಯನಗರ ಜಿಲ್ಲೆಯಲ್ಲಿ ಅತ್ಯಧಿಕ ಅಂದರೆ ಶೇ. 67 ರಷ್ಟು ಮಳೆ ಕೊರತೆ ದಾಖಲಾಗಿದೆ. ಪ್ರಾದೇಶಿಕವಾಗಿ ನೋಡುವುದಾದರೆ ಮಲೆನಾಡಿನಲ್ಲಿ ಶೇ. 43, ಕರಾವಳಿಯಲ್ಲಿ ಶೇ. 35, ಉತ್ತರ ಒಳನಾಡಿನಲ್ಲಿ ಶೇ. 33 ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇ. 31 ರಷ್ಟು ಮಳೆ ಕೊರತೆಯಾಗಿದೆ. ಕಾವೇರಿ ಕಣಿವೆಯಲ್ಲಿ ಶೇ. 51 ಮತ್ತು ಕೃಷ್ಣಾ ಕಣಿವೆಯಲ್ಲಿ ಶೇ. 48 ರಷ್ಟು ನೀರಿದ್ದರೆ, ಲಿಂಗನಮಕ್ಕಿ, ಸೂಪ ಮತ್ತು ವರಾಹಿಯಂತಹ ಜಲವಿದ್ಯುತ್ ಜಲಾಶಯಗಳಲ್ಲಿ ಕೇವಲ ಸರಾಸರಿ ಶೇ. 23 ರಷ್ಟು ಮಾತ್ರ ನೀರು ಸಂಗ್ರಹವಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕಳೆದ ವರ್ಷ 681.83 ಟಿಎಂಸಿ ನೀರಿದ್ದರೆ, ಈ ಬಾರಿ ಕೇವಲ 359.98 ಟಿಎಂಸಿ (ಅಂದರೆ ಶೇ. 40 ರಷ್ಟು) ಮಾತ್ರ ನೀರು ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ರೈತರು ಕಡಿಮೆ ನೀರಿನ ಬಳಕೆಯಾಗುವ ಪರ್ಯಾಯ ಬೆಳೆಗಳನ್ನು ಬೆಳೆಯುವ ಮೂಲಕ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









