ದರ್ಶನ್ ಸಂಬಂಧಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ಜಾಮೀನು ನಿರಾಕರಣೆಯಿಂದ ಸಂಕಷ್ಟದಲ್ಲಿರುವ ದರ್ಶನ್ಗೆ, ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಕೋರ್ಟ್ ಮತ್ತು ನ್ಯಾಯಾಧೀಶರ ಬದಲಾವಣೆ ಹೊಸ ಆತಂಕಕ್ಕೆ ಕಾರಣವಾಗಿದೆ.
ಸುಪ್ರೀಂ ಕೋರ್ಟ್ ಈಗಾಗಲೇ ದರ್ಶನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಮುಂದಿನ ವರ್ಷ ಮೇ ತಿಂಗಳೊಳಗೆ ವಿಚಾರಣೆ ಪೂರ್ಣಗೊಳ್ಳದಿದ್ದರೆ ಮಾತ್ರ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸ್ಪಷ್ಟಪಡಿಸಿದೆ.ಇದರ ನಡುವೆಯೇ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಈ ಹೈಪ್ರೊಫೈಲ್ ಪ್ರಕರಣವನ್ನು ಸಿಸಿಹೆಚ್-57 ಕೋರ್ಟ್ನಿಂದ ಸಿಸಿಹೆಚ್-59 ಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಸಿಟಿ ಸಿವಿಲ್ ಕೋರ್ಟ್ ಡೆಪ್ಯುಟಿ ರಿಜಿಸ್ಟ್ರಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಜೂನ್ 1ರಿಂದ ಹೊಸ ಕೋರ್ಟ್ನಲ್ಲಿ ವಿಚಾರಣೆ ಆರಂಭವಾಗಲಿದ್ದು, ನ್ಯಾಯಮೂರ್ತಿ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಪ್ರಕರಣದ ಮುಂದಿನ ವಿಚಾರಣೆ ನಡೆಸಲಿದ್ದಾರೆ.ಪ್ರಕರಣದ ವಿಚಾರಣೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಸ್ಥಳೀಯ ನ್ಯಾಯಾಲಯ ವಾರಕ್ಕೆ ಕನಿಷ್ಠ ಎರಡು ಬಾರಿ ಅಥವಾ ನಾಲ್ಕು ದಿನಗಳ ಕಾಲ ನಿರಂತರ ವಿಚಾರಣೆ ನಡೆಸುವ ಸಾಧ್ಯತೆ ಇದೆ.ಜಾಮೀನು ತಿರಸ್ಕಾರ, ವೇಗದ ವಿಚಾರಣೆ ಹಾಗೂ ಕೋರ್ಟ್ ವರ್ಗಾವಣೆ — ಈ ಮೂರು ಬೆಳವಣಿಗೆಗಳು ದರ್ಶನ್ ಹಾಗೂ ಅವರ ಕುಟುಂಬದ ಮೇಲೆ ಹೆಚ್ಚುವರಿ ಒತ್ತಡ ತಂದಿವೆ ಎಂದು ಹೇಳಲಾಗುತ್ತಿದೆ.








