ಸುದ್ದಿಒನ್,ಬೆಂಗಳೂರು,ಮೇ.12 : ಇಂಡಿಯನ್ ಪ್ರೀಮಿಯರ್ ಲೀಗ್ (IPL) ಬೆಟ್ಟಿಂಗ್ ಹವ್ಯಾಸಕ್ಕೆ ಬಿದ್ದು ಮೈತುಂಬಾ ಸಾಲ ಮಾಡಿಕೊಂಡಿದ್ದ ಯುವಕನೋರ್ವ, ಸಾಲ ತೀರಿಸಲಾಗದೆ ನೇಣಿಗೆ ಶರಣಾಗಿರುವ ಕರುಣಾಜನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.
ಮೂಲತಃ ತಮಿಳುನಾಡಿನ ಸಿಂಗಸದನಪಲ್ಲಿ ಗ್ರಾಮದ ಶಿವಕುಮಾರ್ (28) ಮೃತಪಟ್ಟ ದುರ್ದೈವಿ. ಕಳೆದ ಆರು ವರ್ಷಗಳಿಂದ ಜೀವನೋಪಾಯಕ್ಕಾಗಿ ನೆಲಮಂಗಲಕ್ಕೆ ಬಂದಿದ್ದ ಈತ, ಸ್ಥಳೀಯ ಕಾರ್ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದ. ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ಕಟ್ಟುವ ಚಟಕ್ಕೆ ಬಿದ್ದಿದ್ದ ಶಿವಕುಮಾರ್, ಅತಿಯಾದ ಹಣ ಕಳೆದುಕೊಂಡು ದೊಡ್ಡ ಮಟ್ಟದ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.

ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಸೆಲ್ಫಿ ವಿಡಿಯೋವೊಂದನ್ನು ರೆಕಾರ್ಡ್ ಮಾಡಿದ್ದು, ತನ್ನ ನೋವನ್ನು ತೋಡಿಕೊಂಡಿದ್ದಾನೆ.ನನ್ನ ಸಾವಿಗೆ ನಾನೇ ಕಾರಣ, ಬೇರೆ ಯಾರೂ ಜವಾಬ್ದಾರರಲ್ಲ. ಅತಿಯಾದ ಸಾಲ ಮಾಡಿಕೊಂಡಿದ್ದು, ಅದನ್ನು ತೀರಿಸಲಾಗದೆ ಬದುಕಲು ಇಷ್ಟವಿಲ್ಲದೆ ಈ ನಿರ್ಧಾರ ಕೈಗೊಳ್ಳುತ್ತಿದ್ದೇನೆ.ನನ್ನ ಸ್ನೇಹಿತ ನನಗೆ ತುಂಬಾ ಸಹಾಯ ಮಾಡಿದ್ದಾನೆ, ಆದರೆ ಈಗ ಬದುಕುವ ಹಾದಿ ಕಾಣುತ್ತಿಲ್ಲ ಎಂದು ಹೇಳಿದ್ದಾನೆ.
ಎರಡು ದಿನಗಳ ಹಿಂದೆಯೇ ತನ್ನ ಕೊಠಡಿಯಲ್ಲಿ ಶಿವಕುಮಾರ್ ನೇಣಿಗೆ ಶರಣಾಗಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















