ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ನಗರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಅಗತ್ಯವಾದ ಅನುದಾನವನ್ನು ಕನ್ನಡ ಸಾಹಿತ್ಯ ಪರಿಷತ್ತಿನಿಂದಲೇ ಪಡೆಯಿರಿ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಅವರು ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ನೀಡಿದ ಮನವಿಗೆ ಉತ್ತರಿಸಿದರು. ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, 2009 ರಲ್ಲಿ 75 ನೇ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಿತ್ತು. ಸಮ್ಮೇಳನಲ್ಲಿ ಉಳಿದ ಹಣದಿಂದ ನಿವೇಶನ ಖರೀದಿ ಮಾಡಲಾಗಿದೆ. ನಗರಾಭಿವೃದ್ಧಿ ಇಲಾಖೆ ವಿಶಾಲವಾದ ನಿವೇಶನವನ್ನು ನೀಡಿದೆ. ರಾಜ್ಯದಲ್ಲಿ ಬಳ್ಳಾರಿ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕನ್ನಡ ಭವನಗಳಿವೆ. ಆದರೆ ಜಿಲ್ಲೆಯಲ್ಲಿ ಕನ್ನಡ ಭವನ ಜಿಲ್ಲೆಯ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಕನಸಾಗಿದೆ. ಕನ್ನಡ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ.
ಪಿಳ್ಳೇಕೇರನಹಳ್ಳಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಕನ್ನಡ ಭವನಕ್ಕೆ ಅಗತ್ಯವಾದ ವಿಶಾಲ ನಿವೇಶನವಿದೆ. ಕನ್ನಡ ಭವನ ನಿರ್ಮಾಣಕ್ಕೆ ಕನಿಷ್ಟ 2 ಕೋಟಿ ರೂಗಳ ಅನುದಾನದ ಅವಶ್ಯಕತೆ ಇದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಅಗತ್ಯ ಅನುದಾನ ನೀಡುವಂತೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಅನುದಾನ ನೀಡಲಾಗುತ್ತದೆ. ಸಾಮಾನ್ಯವಾಗಿ ಸಾಹಿತ್ಯ ಪರಿಷತ್ತಿಗೆ 25 ಕೋಟಿ ರೂಗಳ ಅನುದಾನ ನೀಡಲಾಗುತ್ತಿತ್ತು. ಈ ಬಾರಿ 5 ಕೋಟಿ ರೂಗಳನ್ನು ನೀಡಲಾಗಿದೆ. ಅಲ್ಲಿಯ ಅನುದಾನ ಬಳಸಿ ಕನ್ನಡ ಭವನ ನಿರ್ಮಿಸಿ ಎಂದರು. ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ಕಸಾಪ ಜಿಲ್ಲಾ ಕಾರ್ಯದರ್ಶಿ ಮಳಲಿ ಶ್ರೀನಿವಾಸ್, ಖಜಾಂಚಿ ಸಿ.ಲೋಕೇಶ ಮತ್ತಿತರರಿದ್ದರು.


