ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ಕಡಲತೀರಗಳಲ್ಲಿ ಸಮುದ್ರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಪಣಂಬೂರು, ತಣ್ಣೀರ್ಭಾವಿ ಹಾಗೂ ಸೋಮೇಶ್ವರ ಬೀಚ್ಗಳಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿಯುವುದನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ನಿಷೇಧಿಸಿದೆ. ಕಡಲ ತೀರ ಪ್ರದೇಶಗಳಲ್ಲಿ ಸಮುದ್ರದ ಅಲೆಗಳು ಅಪಾಯಕಾರಿಯಾಗಿ ಎತ್ತರಕ್ಕೆ ಅಪ್ಪಳಿಸುತ್ತಿರುವುದರಿಂದ ಪ್ರವಾಸಿಗರು ಯಾವುದೇ ಕಾರಣಕ್ಕೂ ನೀರಿಗೆ ಇಳಿಯಬಾರದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಪಣಂಬೂರು ಬೀಚ್ನಲ್ಲಿ ಅಪಾಯ ವಲಯವನ್ನು ಗುರುತಿಸಲು ಕೆಂಪು ಹಗ್ಗಗಳನ್ನು ಅಳವಡಿಸಲಾಗಿದ್ದು, ಎಚ್ಚರಿಕೆ ಫಲಕಗಳನ್ನು ಸ್ಥಾಪಿಸಲಾಗಿದೆ. ಕರಾವಳಿ ಭದ್ರತಾ ಪೊಲೀಸ್ ಸಿಬ್ಬಂದಿ ಹಾಗೂ ಲೈಫ್ಗಾರ್ಡ್ಗಳು ದಿನದ 24 ಗಂಟೆಗಳೂ ನಿಗಾ ವಹಿಸುತ್ತಿದ್ದು, ನಿಯಮ ಉಲ್ಲಂಘಿಸಿ ಸಮುದ್ರ ಪ್ರವೇಶಿಸುವವರ ವಿರುದ್ಧ ಕಾನೂನು ಕ್ರಮ ಹಾಗೂ ದಂಡಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.
ಜೆಟ್ ಸ್ಕೀ, ಬೋಟಿಂಗ್ ಸೇರಿದಂತೆ ಎಲ್ಲಾ ರೀತಿಯ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮುಂಗಾರು ಪರಿಸ್ಥಿತಿ ಮುಂದುವರಿದರೆ ಮುಂದಿನ ಮೂರುರಿಂದ ನಾಲ್ಕು ತಿಂಗಳುಗಳವರೆಗೆ ಈ ನಿರ್ಬಂಧ ಜಾರಿಯಲ್ಲಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ಮುಲ್ಕಿ ಸಮೀಪದ ಸಸಿಹಿತ್ಲು ಮುಂಡಾ ಬೀಚ್ ನಲ್ಲಿಯೂ ಭಾರೀ ಮಳೆ ಮತ್ತು ಬಿರುಗಾಳಿಯ ಪರಿಣಾಮ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಬಲವಾದ ಗಾಳಿಯಿಂದ ಮರಗಳು ಉರುಳುವ ಅಪಾಯ ಹೆಚ್ಚಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















