ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 15 : ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆ ಮತ್ತು ಮೂರ್ತಿ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಪಟಾಕಿ/ಸಿಡಿಮದ್ದುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ದಿನಾಂಕ: 14.09.2026 ರಂದು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಾಗುತ್ತದೆ. ಈ ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್ ಹಾಗೂ ಪಟಾಕಿ/ಸಿಡಿಮದ್ದುಗಳನ್ನು ಸಿಡಿಸುವುದರಿಂದ ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ. ಅಲ್ಲದೆ ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ ಮತ್ತು ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಸಾರ್ವಜನಿಕ ಶಾಂತಿ ಪಾಲನೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು, ಚಿತ್ರದುರ್ಗ ಜಿಲ್ಲೆ ರವರು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್) 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35, 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ದಿನಾಂಕ: 14.09.2026 ರಿಂದ ದಿನಾಂಕ: 05.10.2026 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ದಿನಾಂಕ: 11.09.2026 ರಂದು ಆದೇಶ ಹೊರಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ/ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ನಿಯಮ ಉಲ್ಲಂಘನೆ ಮಾಡುವುದು ಕಂಡು ಬಂದಲ್ಲಿ ಕಾನೂನು ಪ್ರಕಾರ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.








