ಬೆಂಗಳೂರು: ಬೆಂಗಳೂರಿನ ಕೆ.ಆರ್. ಪುರಂ ಸಮೀಪದ ಸೀಗೇಹಳ್ಳಿಯಲ್ಲಿ ಇಡೀ ನಗರವೇ ಬೆಚ್ಚಿಬೀಳುವಂತಹ ಭೀಕರ ತ್ರಿವಳಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಪ್ರೀತಿಯ ವಿಷಯಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಸ್ವಂತ ಮಗಳೇ ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತವರು ಹಾಗೂ ಸಹೋದರಿಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಶಂಕೆ ವ್ಯಕ್ತವಾಗಿದೆ.ಮನೆಯೊಳಗೆ ಶವವಾಗಿ ಪತ್ತೆಯಾದವರನ್ನು ತಂದೆ ಸೋಮಸುಂದರ (55), ತಾಯಿ ಮುತ್ತುಲಕ್ಷ್ಮಿ (48) ಮತ್ತು ಕಿರಿಯ ಮಗಳು ಸುಪ್ರಿಯಾ (20) ಎಂದು ಗುರುತಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ದಂಪತಿಯ ಹಿರಿಯ ಮಗಳು ಶ್ವೇತಾ, ಕೆನತ್ ಎಂಬಾತನೊಂದಿಗೆ ಲಿವ್-ಇನ್ ರಿಲೇಷನ್ ಶಿಪ್ನಲ್ಲಿದ್ದಳು ಎನ್ನಲಾಗಿದೆ. ಈ ಪ್ರೇಮ ಸಂಬಂಧಕ್ಕೆ ತಂದೆ-ತಾಯಿ ಹಾಗೂ ತಂಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೇ ವಿಚಾರವಾಗಿ ಮನೆಯಲ್ಲಿ ನಿರಂತರವಾಗಿ ಗಲಾಟೆ ಮತ್ತು ತೀವ್ರ ವೈಮನಸ್ಸು ಸೃಷ್ಟಿಯಾಗಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಸೇರಿ ಇಡೀ ಕುಟುಂಬವನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರಬಹುದು ಎಂದು ಪೊಲೀಸರು ಬಲವಾಗಿ ಶಂಕಿಸಿದ್ದಾರೆ.
ಸದ್ಯಕ್ಕೆ ಕೆ.ಆರ್. ಪುರಂ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಶಂಕಿತ ಆರೋಪಿಗಳಾದ ಶ್ವೇತಾ ಮತ್ತು ಕೆನತ್ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಇಬ್ಬರ ಮೊಬೈಲ್ ಕರೆಗಳ ವಿವರ (CDR) ಹಾಗೂ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡಲಾಗುತ್ತಿದೆ.















