ಬೆಂಗಳೂರು.ಜುಲೈ.23 : ಬೆಂಗಳೂರಿನ ಪಾದಚಾರಿ ಮಾರ್ಗಗಳಲ್ಲಿ ಬೇಕಾಬಿಟ್ಟಿ ದ್ವಿಚಕ್ರ ವಾಹನ ಚಲಾಯಿಸುವ ಸವಾರರಿಗೆ ಶೀಘ್ರದಲ್ಲೇ ಭಾರೀ ದಂಡ ಬೀಳುವ ಆತಂಕ ಎದುರಾಗಿದೆ.
ಫುಟ್ ಪಾತ್ ಗಳ ಮೇಲೆ ಬೈಕ್ ಓಡಿಸುವವರಿಗೆ ಪ್ರಸ್ತುತ ವಿಧಿಸಲಾಗುತ್ತಿರುವ ₹500 ದಂಡದ ಮೊತ್ತವನ್ನು ನೇರವಾಗಿ ₹5,000ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿ ಸಚಿವ ಕೃಷ್ಣ ಬೈರೇಗೌಡ ಅವರು ಸಾರಿಗೆ ಸಚಿವರಿಗೆ ಅಧಿಕೃತ ಪತ್ರ ಬರೆದಿದ್ದಾರೆ.
ಬೆಂಗಳೂರು ನಗರದ ಸಂಚಾರಿ ಪೊಲೀಸ್ ಉನ್ನತಾಧಿಕಾರಿಗಳ ಜೊತೆ ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಗರದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಯಶಸ್ವಿಯಾಗಿ ನಡೆಯುತ್ತಿದೆ. ಆದರೆ ಬೀದಿಬದಿ ವ್ಯಾಪಾರಿಗಳಿಂದ ಮುಕ್ತಗೊಳಿಸಿದ ಜಾಗದಲ್ಲಿ ವಾಹನ ಸವಾರರು ಅಕ್ರಮವಾಗಿ ಚಲಿಸುತ್ತಿರುವುದು ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತಿದೆ.
ದಂಡದ ಪ್ರಮಾಣ ಹೆಚ್ಚಾದರೆ ಮಾತ್ರ ಸವಾರರಲ್ಲಿ ಕಾನೂನಿನ ಭಯ ಬರಲು ಸಾಧ್ಯ. ಹೀಗಾಗಿ ಹಾಲಿ ಇರುವ ದಂಡದ ಪ್ರಮಾಣವನ್ನು ಹತ್ತು ಪಟ್ಟು ಹೆಚ್ಚಿಸುವುದು ಅನಿವಾರ್ಯ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.









