ಬೆಂಗಳೂರು: ದಾವಣಗೆರೆ – ಬಾಗಲಕೋಟೆ ಕ್ಷೇತ್ರದಲ್ಲಿ ಏಪ್ರಿಲ್ 9ಕ್ಕೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿಯೇ ಇದ್ದರು. ಇದೀಗ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹೊಸ ವ್ಯಕ್ತಿಗಳಿಗೆ ಅವಕಾಶ ನೀಡಿದೆ. ಬಾಗಲಕೋಟೆಯಲ್ಲಿ ಹೆಚ್ ವೈ ಮೇಟಿ ನಿಧನದ ಬಳಿಕ ಆ ಕ್ಷೇತ್ರ ಖಾಲಿ ಉಳಿದಿತ್ತು.
ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಚರಂತಿಮಠ್ ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಘೋಷಣೆ ಮಾಡಿದೆ. ಚರಂತಿಮಠ್ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಾಗಿರುವ ಕಾರಣ ಬಿಜೆಪಿ ನಾಯಕರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯವೇ ಹೆಚ್ಚಾಗಿತ್ತು. ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಆಡಳಿತವೇ ಇತ್ತು. ಅವರ ನಿಧನದ ಬಳಿಕ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಶ್ರೀನಿವಾಸ್ ಟಿ.ದಾಸರಿಯಲ್ಲ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇಲ್ಲಿ ಬಿಜೆಪಿ ವಾಲ್ಮೀಕಿ ಸಮುದಾಯಕ್ಕೆ ಆದ್ಯತೆಯನ್ನು ಕೊಟ್ಟಿದೆ. ಎಸ್ಟಿ ಮತಗಳನ್ನು ಸೆಳೆಯುವ ಉದ್ದೇಶದಿಂದ ಬಿಜೆಪಿ ಈ ತೀರ್ಮಾನವನ್ನ ಮಾಡಿದೆ. ಎರಡು ಕ್ಷೇತ್ರದಲ್ಲೂ ಈ ಬಾರಿ ಗೆಲ್ಲಬೇಕು ಎಂಬ ಹಠ ಬಿಜೆಪಿಯದ್ದಾಗಿದೆ. ಕಾಂಗ್ರೆಸ್ ನಾಯಕರಿಗೂ ಆ ಎರಡು ಕ್ಷೇತ್ರವನ್ನು ಗೆಲ್ಲುವ ಭರವಸೆ ಇದೆ. ಅದರಲ್ಲೂ ದಾವಣಗೆರೆ ಕ್ಷೇತ್ರದಲ್ಲಿ ಟಿಕೆಟ್ ಗೆ ಬೇಡಿಕೆ ಜಾಸ್ತಿಯಾಗಿದೆ. ಬಿಜೆಪಿ ಏನೋ ಅಭ್ಯರ್ಥಿಗಳನ್ನ ಅನೌನ್ಸ್ ಮಾಡಿ ಆಗಿದೆ. ಈಗ ಎಲ್ಲರ ಚಿತ್ರ ಕಾಂಗ್ರೆಸ್ ನತ್ತಿ ನೆಟ್ಟಿದೆ. ಆ ಕಡೆಯಿಂದ ಯಾರನ್ನ ಅಭ್ಯರ್ಥಿಯನ್ನಾಗಿ ನಿಲ್ಲಿಸಬಹುದು ಎಂಬ ಕುತೂಹಲವಿದೆ.









