ಬೆಂಗಳೂರು: ಪರಿಶಿಷ್ಟ ಪಂಗಡಗಳ (ಎಸ್ಟಿ) ಮೀಸಲಾತಿಯನ್ನು ಶೇ.7ರಿಂದ ಶೇ.3ಕ್ಕೆ ಇಳಿಸಿ ಕಾಂಗ್ರೆಸ್ ಸರ್ಕಾರ ದಲಿತ ಮತ್ತು ಹಿಂದುಳಿದ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿ, ಇದರ ವಿರುದ್ಧ ರಾಜ್ಯವ್ಯಾಪಿ ಹೋರಾಟ ನಡೆಸುವುದಾಗಿ ಘೋಷಿಸಿದೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ , ಬಿಜೆಪಿ ಸರ್ಕಾರದ ಅವಧಿಯಲ್ಲಿ ಜನಸಂಖ್ಯೆ ಆಧಾರದ ಮೇಲೆ ಪರಿಶಿಷ್ಟ ಜಾತಿ (ಎಸ್ಸಿ) ಮೀಸಲಾತಿಯನ್ನು ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಿಸಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ಹೆಸರಿನಲ್ಲಿ ಹೊಸ ಆದೇಶ ಹೊರಡಿಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

“ಮಾದಿಗ, ಅಲೆಮಾರಿ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಚರ್ಚೆ ನಡೆಸಿ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು. ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆದು ಹಿಂದಿನ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸಬೇಕು” ಎಂದು ಅವರು ಒತ್ತಾಯಿಸಿದರು.
ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, “ದಲಿತ ಸಮುದಾಯದ ಮೂಗಿಗೆ ತುಪ್ಪ ಸವರಿಸುವ ಕೆಲಸ ಮಾಡಲಾಗಿದೆ. ಹೆಚ್ಚುವರಿ ಮೀಸಲಾತಿ ವಿಚಾರದಲ್ಲಿ ಸರ್ಕಾರ ಸಮರ್ಪಕವಾಗಿ ವಾದ ಮಂಡಿಸದ ಕಾರಣ ಹಿನ್ನಡೆಯಾಗಿದೆ” ಎಂದು ಟೀಕಿಸಿದರು.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಮಾತನಾಡಿ, “ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರವೇ ಈಗ ಮೀಸಲಾತಿ ವಿಚಾರದಲ್ಲಿ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ” ಎಂದು ವಾಗ್ದಾಳಿ ನಡೆಸಿದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಾಜುಗೌಡ ನಾಯಕ, ಎನ್. ರವಿಕುಮಾರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.ಇನ್ನೊಂದೆಡೆ, ಸರ್ಕಾರದ ಈ ಕ್ರಮಕ್ಕೆ ವಿವಿಧ ದಲಿತ ಹಾಗೂ ಹಿಂದುಳಿದ ಸಂಘಟನೆಗಳಿಂದಲೂ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಮೀಸಲಾತಿ ವಿಚಾರ ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ.


















