ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಮತ್ತೊಂದು ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ನಗರದ DRDO ಹಾಗೂ GTRE ಕಚೇರಿಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿದ್ದು, ಭಾರೀ ಆತಂಕ ಮೂಡಿಸಿದೆ.ಅಪರಿಚಿತ ವ್ಯಕ್ತಿಯೊಬ್ಬನು ಕಳುಹಿಸಿರುವ ಈ ಇಮೇಲ್ನಲ್ಲಿ 13 ಸೈನೈಡ್ ಗ್ಯಾಸ್ನಿಂದ ದಾಳಿ ನಡೆಸುವ ಯೋಜನೆ ಇದ್ದು, ಒಂದು ಗಂಟೆಯೊಳಗೆ ಸ್ಫೋಟ ಸಂಭವಿಸಲಿದೆ ಎಂದು ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.
ಇದೇ ಮೇಲ್ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಪುತ್ರ ಉದಯಾನಿಧಿ ಸ್ಟಾಲಿನ್ ಅವರ ಮಗನನ್ನು ಕಿಡ್ನ್ಯಾಪ್ ಮಾಡುವುದಾಗಿ ಕೂಡ ಬೆದರಿಕೆ ಹಾಕಲಾಗಿದೆ. ಇಂಬನಿಧಿಗೆ ಹಾನಿ ಮಾಡುವುದಾಗಿ ಉಲ್ಲೇಖಿಸಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ.Kiruthiha.udhayanidhi@hotmail ಎಂಬ ಐಡಿಯಿಂದ ತಮಿಳು ಭಾಷೆಯಲ್ಲಿ ಈ ಮೇಲ್ ಕಳುಹಿಸಲಾಗಿದ್ದು, ಕಚೇರಿ ಅಧಿಕಾರಿಗಳು ಅದನ್ನು ಪರಿಶೀಲಿಸಿದ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ಮಾಹಿತಿ ತಿಳಿದ ತಕ್ಷಣ ಬೈಯಪ್ಪನಹಳ್ಳಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದು ದುಷ್ಕರ್ಮಿಗಳ ಕೃತ್ಯವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಇಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ತಮಿಳುನಾಡಿನಲ್ಲಿ ನಡೆಯುತ್ತಿರುವ ರಾಜಕೀಯ ಪರಿಸ್ಥಿತಿಯ ಹಿನ್ನೆಲೆ ಈ ರೀತಿಯ ಬೆದರಿಕೆ ಕೃತ್ಯ ನಡೆದಿದೆ ಎನ್ನುವ ಶಂಕೆಯೂ ವ್ಯಕ್ತವಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ಗಂಭೀರ ತನಿಖೆ ಮುಂದುವರಿಸಿದ್ದಾರೆ.















