ಸುದ್ದಿಒನ್,ಬೆಳಗಾವಿ,ಮೇ08:ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಈ ನಡುವೆ ಬೆಳಗಾವಿಯಲ್ಲಿ ಹೀಟ್ ಸ್ಟ್ರೋಕ್ನಿಂದಾಗಿ ವ್ಯಕ್ತಿಯೊಬ್ಬರು ಬಲಿಯಾಗಿರುವ ದಾರುಣ ಘಟನೆ ನಡೆದಿದೆ.
ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಮತ್ತು ಬಿಸಿ ಗಾಳಿಯ ಅಬ್ಬರ ಹೆಚ್ಚಾಗುತ್ತಿದೆ. ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ವಾರದ ಸಂತೆಯಲ್ಲಿ ವ್ಯಾಪಾರ ನಿರತರಾಗಿದ್ದ ವರ್ಧಮಾನ ಮಗದುಮ ಎಂಬುವವರು ಬಿಸಿಲಿನ ತಾಪ ತಾಳಲಾರದೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದಾಗ ಕುಸಿದು ಬಿದ್ದ ವರ್ಧಮಾನ ಅವರನ್ನು ಸ್ಥಳೀಯರು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮೊದಲೇ ಅವರು ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.


















