ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಹಾಗೂ ಆಡಳಿತಾತ್ಮಕ ಅಗತ್ಯತೆಗಳನ್ನು ಪರಿಗಣಿಸಿ, 2026-27ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಅವಧಿಯನ್ನು ಜುಲೈ 31, 2026ರವರೆಗೆ ವಿಸ್ತರಿಸಿ ಕರ್ನಾಟಕ ಸರ್ಕಾರ ಬುಧವಾರ ಮಹತ್ವದ ಆದೇಶ ಹೊರಡಿಸಿದೆ.
ಈ ಹಿಂದೆ ಹೊರಡಿಸಲಾಗಿದ್ದ ಆದೇಶಗಳ ಅನ್ವಯ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗೆ ಜುಲೈ 15, 2026 ರವರೆಗೆ ಮಾತ್ರ ಕಾಲಾವಕಾಶ ನೀಡಲಾಗಿತ್ತು. ಆದರೆ ಪ್ರಸ್ತುತ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಅವಧಿಯನ್ನು ವಿಸ್ತರಿಸುವುದು ಸೂಕ್ತವೆಂದು ಪರಿಗಣಿಸಿರುವ ಸರ್ಕಾರ, ನಿಯಮಾನುಸಾರ ಜುಲೈ ಅಂತ್ಯದವರೆಗೆ ಅಂದರೆ 31.07.2026ರವರೆಗೆ ವರ್ಗಾವಣೆ ಅವಧಿಯನ್ನು ಮುಂದುವರಿಸಲು ನಿರ್ಧರಿಸಿದೆ.

ದಿನಾಂಕ 13.04.2026ರ ಮೂಲ ಸರ್ಕಾರಿ ಆದೇಶದಲ್ಲಿ ನಿಗದಿಪಡಿಸಲಾಗಿರುವ ಎಲ್ಲಾ ಷರತ್ತುಗಳು ಮತ್ತು ನಿಬಂಧನೆಗಳಿಗೆ ಒಳಪಟ್ಟೇ ಈ ವರ್ಗಾವಣೆ ಅವಧಿಯ ವಿಸ್ತರಣೆ ಅನ್ವಯವಾಗಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಸೇವಾ ನಿಯಮಗಳು-3) ಜಂಟಿ ಕಾರ್ಯದರ್ಶಿಗಳು ತಮ್ಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಈ ನಿರ್ಧಾರದಿಂದಾಗಿ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಇಲಾಖಾ ನೌಕರರಿಗೆ ಮತ್ತಷ್ಟು ಕಾಲಾವಕಾಶ ಸಿಕ್ಕಂತಾಗಿದೆ.











