ಬೆಂಗಳೂರು.ಜುಲೈ.14: ರಾಜ್ಯ ರಾಜಕಾರಣದ ಹಿರಿಯ ಕೊಂಡಿ, ಭಾರತೀಯ ಜನತಾ ಪಕ್ಷದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಇಂದು ಮುಂಜಾನೆ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆ ಹಾಗೂ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ, ಇಂದಿನ ಬಲಿಷ್ಠ ಸ್ಥಾನಕ್ಕೆ ತಂದು ನಿಲ್ಲಿಸುವಲ್ಲಿ ರಾಮಚಂದ್ರೇಗೌಡರ ಪಾತ್ರ ಅನನ್ಯವಾದುದು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೂಡಿ ಪಕ್ಷದ ಆರಂಭದ ದಿನಗಳಿಂದಲೂ ಹೆಗಲಿಗೆ ಹೆಗಲು ಕೊಟ್ಟು ದುಡಿದಿದ್ದ ಅವರು, ಕಮಲ ಪಾಳಯದ ಪ್ರಮುಖ ಸಂಘಟನಾ ಶಕ್ತಿಯಾಗಿದ್ದರು.1970ರಲ್ಲಿ ಅಧಿಕೃತವಾಗಿ ರಾಜಕೀಯ ರಂಗಕ್ಕೆ ಪ್ರವೇಶಿಸಿದ ಅವರು, ಸಚಿವರಾಗಿ ಹಾಗೂ ಪಕ್ಷದ ಮುಂಚೂಣಿ ನಾಯಕರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಇವರ ನಿಧನಕ್ಕೆ ನಾಡಿನ ಗಣ್ಯರು ಹಾಗೂ ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.









