ಬಾಗಲಕೋಟೆ : ಬಾಗಲಕೋಟೆ ಉಪಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳುತ್ತಿರುವ ನಡುವೆಯೇ ಅಕ್ರಮ ನಗದು ಸಾಗಾಟ ಪ್ರಕರಣ ಪತ್ತೆಯಾಗಿ ಚರ್ಚೆಗೆ ಗ್ರಾಸವಾಗಿದೆ.
ಹೊನ್ನಾಕಟ್ಟಿ ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು, ಮಾರುತಿ ಎರ್ಟಿಗಾ ಕಾರಿನಲ್ಲಿ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹32.50 ಲಕ್ಷ ನಗದನ್ನು ಜಪ್ತಿ ಮಾಡಿದ್ದಾರೆ. ಈ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ್ದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ರಾಯಚೂರಿನಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಈ ನಗದು ಕುರಿತು ಸೂಕ್ತ ದಾಖಲೆಗಳನ್ನು ಒದಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣವೇ ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಾಜ್ಯದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಅಕ್ರಮ ಹಣ ಸಾಗಾಟ ಮತ್ತು ಮತದಾರರಿಗೆ ಆಮಿಷ ಒಡ್ಡುವ ಪ್ರಯತ್ನಗಳನ್ನು ತಡೆಯಲು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದೆ. ಈ ಹಿನ್ನೆಲೆ ಇಂತಹ ಪ್ರಕರಣಗಳು ಪತ್ತೆಯಾಗುತ್ತಿದ್ದು, ಅಧಿಕಾರಿಗಳು ನಿಗಾವನ್ನು ಮತ್ತಷ್ಟು ಕಠಿಣಗೊಳಿಸಿದ್ದಾರೆ.










