ಬೆಂಗಳೂರು.ಆಗಸ್ಟ್.19 : ರಾಜ್ಯದ ಸರ್ಕಾರಿ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ನಗದು ರಹಿತ ಚಿಕಿತ್ಸೆ ಒದಗಿಸುವ ‘ಸಂಧ್ಯಾ ಕಿರಣ’ ಯೋಜನೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಈ ನಿರ್ಧಾರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಸ್ವಾಗತಿಸಿದೆ.
ರಾಜ್ಯದಲ್ಲಿ ಸುಮಾರು 5.20 ಲಕ್ಷ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿದ್ದಾರೆ. 60ರಿಂದ 70 ವರ್ಷದೊಳಗಿನ ನಿವೃತ್ತ ನೌಕರರಿಗೆ ಆರೋಗ್ಯ ಭದ್ರತೆ ಒದಗಿಸಲು ‘ಸಂಧ್ಯಾ ಕಿರಣ’ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಸಂಘವು ಸರ್ಕಾರದ ಹಂತದಲ್ಲಿ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬಂದಿತ್ತು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 13 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕಾಗಿ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸಂಘದ ಅಧ್ಯಕ್ಷ ಡಾ. ಎಲ್. ಬೈರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಆರೋಗ್ಯ ಸೌಲಭ್ಯ ಯೋಜನೆಯಡಿ ಗರಿಷ್ಠ ರೂ.5 ಲಕ್ಷದವರೆಗೆ ನಗದು ರಹಿತ ವೈದ್ಯಕೀಯ ಸೇವೆ ಲಭ್ಯವಾಗಲಿದ್ದು, ಸುಮಾರು 4.93 ಲಕ್ಷ ನಿವೃತ್ತ ನೌಕರರು, ಅವರ ಅವಲಂಬಿತರು ಹಾಗೂ ಕುಟುಂಬ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ವಯೋ ವಂದನಾ ಯೋಜನೆಯಡಿ 80 ವರ್ಷ ಮೇಲ್ಪಟ್ಟ ನಿವೃತ್ತ ನೌಕರರಿಗೆ ‘ಆಯುಷ್ಮಾನ್ ಭಾರತ್ ಆರೋಗ್ಯ-ಭಾಗ್ಯ’ ಯೋಜನೆಯಡಿ ವಾರ್ಷಿಕ ರೂ.5 ಲಕ್ಷ ಮೊತ್ತದ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ.
70ರಿಂದ 80 ವರ್ಷದೊಳಗಿನ ನಿವೃತ್ತ ನೌಕರರಿಗೆ ಮೂಲ ಪಿಂಚಣಿಯಲ್ಲಿ ಶೇ. 10ರಷ್ಟು ಹೆಚ್ಚಳ ಹಾಗೂ ನಿವೃತ್ತ ನೌಕರರು ನಿಧನ ಹೊಂದಿದಾಗ ಅಂತ್ಯಸAಸ್ಕಾರಕ್ಕಾಗಿ ರೂ.10,000 ಆರ್ಥಿಕ ನೆರವು ನೀಡುವಂತೆ 7ನೇ ವೇತನ ಆಯೋಗ ಶಿಫಾರಸು ಮಾಡಿದೆ.
ಈ ಶಿಫಾರಸುಗಳ ಜಾರಿಗೆ ಸರ್ಕಾರ 4-5 ತಿಂಗಳ ಕಾಲಾವಕಾಶ ಕೋರಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ಅನುಷ್ಠಾನಕ್ಕೆ ತರಲು ಸಂಘವು ನಿರಂತರವಾಗಿ ಶ್ರಮಿಸಲಿದೆ ಎಂದು ಡಾ. ಎಲ್. ಬೈರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











