ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188
ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 30 : ದಾರಿಗೆ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರು ಬೈಕ್ ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದಾರೆ.
ಮೃತರನ್ನು ಮಂಜುನಾಥ್ (50) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ.
ಮಂಜುನಾಥ್ ಅವರು ಪರಶುರಾಮಪುರ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ಹಿಂತಿರುಗುವಾಗ ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಈ ವೇಳೆ ಮಂಜುನಾಥ್ ಸ್ಥಳದಲ್ಲೇ ಸಾವಿಗಿಡಾಗಿದ್ದಾರೆ.
ಮಂಜುನಾಥ್ ಅವರ ಜೊತೆ ಇದ್ದ ಪೊಲೀಸ್ ಕಾನ್ಸ್ಟೇಬಲ್ ಸೂರ್ಯಪ್ರಭಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳು ಸೂರ್ಯಪ್ರಭಾ ಅವರು ಮೃತ ಮಂಜುನಾಥ ಸಹೋದರಿ. ಮಂಜುನಾಥ್ ಅವರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
ಅಪಘಾತ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.












