ಹೊಳಲ್ಕೆರೆ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೇದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಪಾಪುರ ಗ್ರಾಮದಲ್ಲಿರುವ ಕೆರೆ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದು, ಕೆರೆಯನ್ನು ಸ್ವಚ್ಛಗೊಳಿಸಿ ಅಭಿವೃದ್ಧಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪಂಪಾಪುರ ಗ್ರಾಮದ ಕೆರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮುಳ್ಳಿನ ಗಿಡಗಳು ಬೆಳೆದು ಕೆರೆ ಸಂಪೂರ್ಣವಾಗಿ ಆವೃತವಾಗಿದೆ. ಇದರಿಂದ ಜಾನುವಾರುಗಳಿಗೆ ನೀರು ಕುಡಿಯಲು ತೊಂದರೆಯಾಗುತ್ತಿದೆ. ಕೆರೆಯಲ್ಲಿ ಬೆಳೆದಿರುವ ಮುಳ್ಳಿನ ಗಿಡಗಳನ್ನು ತೆರವುಗೊಳಿಸಿ, ಅಗತ್ಯವಿರುವ ಕಡೆಗಳಲ್ಲಿ ಹೂಳು ತೆಗೆಸಿ ಸ್ವಚ್ಛಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದಲ್ಲದೆ, ಕೆರೆಯ ಸುತ್ತಮುತ್ತಲಿನ ಜಮೀನುಗಳಿಗೆ ತೆರಳಲು ಸಮರ್ಪಕವಾದ ದಾರಿ ಇಲ್ಲದಿರುವುದರಿಂದ ರೈತರು ಕೂಡ ತೊಂದರೆ ಅನುಭವಿಸುತ್ತಿದ್ದಾರೆ. ಜಾನುವಾರುಗಳಿಗೆ ನೀರಿನ ಸೌಲಭ್ಯ ಹಾಗೂ ರೈತರಿಗೆ ಜಮೀನುಗಳಿಗೆ ತೆರಳಲು ಅನುಕೂಲವಾಗುವಂತೆ ಕೆರೆಯನ್ನು ಅಭಿವೃದ್ಧಿಪಡಿಸಿ, ಅಗತ್ಯ ದಾರಿ ನಿರ್ಮಿಸಿಕೊಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.










